ಎತ್ತಿನಹೊಳೆ ಯೋಜನೆಗೆ ಮತ್ತೆ ತಡೆಯಾಜ್ಞೆ
ಮಂಗಳೂರು, ಡಿಸೆಂಬರ್ 08 : ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ನೀಡಿರುವ ತಡೆಯಾಜ್ಞೆಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠ ಡಿಸೆಂಬರ್ 21ರ ತನಕ ವಿಸ್ತರಣೆ ಮಾಡಿದೆ. ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮತಿ ಸಿಗುವ ತನಕ ಯಾವುದೇ ಕಾಮಗಾರಿ ನಡೆಸುವುದಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದೆ.
ನವೆಂಬರ್ 19ರಂದು ಪುರುಷೋತ್ತಮ ಚಿತ್ತಾಪುರ, ವಿಜಯ್ ಕುಮಾರ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಮಗಾರಿಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಡಿಸೆಂಬರ್ 7ಕ್ಕೆ ವಿಚಾರಣೆ ಮುಂದೂಡಿತ್ತು. ಸೋಮವಾರ ಡಿಸೆಂಬರ್ 21ರ ತನಕ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. [ಎತ್ತಿನಹೊಳೆ ಯೋಜನೆ : ಸರ್ಕಾರದ ಸ್ಪಷ್ಟನೆಗಳು]

ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮತಿ ಸಿಗುವವರೆಗೆ ಮತ್ತು ನ್ಯಾಯಮಂಡಳಿಯಿಂದ ಆದೇಶ ಸಿಗುವವರೆಗೆ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಯಾವುದೇ ಕಾಮಗಾರಿ ಕೈಗೊಳ್ಳುವುದಿಲ್ಲ ಎಂದು ಕರ್ನಾಟಕ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದೆ. [ಎತ್ತಿನಹೊಳೆ ಯೋಜನೆಗೆ ಕರಾವಳಿ ಜನರ ವಿರೋಧವೇಕೆ?]
ಕರ್ನಾಟಕ ಸರ್ಕಾರ ನೀರಾವರಿ ನಿಗಮ ನಿಯಮಿತದ ಮೂಲಕ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಕೈಗೊಂಡಿದ್ದು, ನಿಗಮದ ಪರವಾಗಿ ಹಾಜರಾದ ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಎಂಜಿನಿಯರ್ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ.
ಪ್ರಮಾಣ ಪತ್ರ ಪರಿಶೀಲನೆ ನಡೆಸಿದ ಕೋರ್ಟ್, ಮುಂದಿನ ಆದೇಶದ ತನಕ ಪ್ರಮಾಣಪತ್ರದಲ್ಲಿ ನೀಡಿರುವ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 21ಕ್ಕೆ ಮುಂದೂಡಿದೆ. ಯೋಜನೆ ಕುರಿತು ಡಿಸೆಂಬರ್ 18ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ರಾಜ್ಯದ ಅಧಿಕಾರಿಗಳು ಮಾತುಕತೆ ನಡೆಸಲಿದ್ದಾರೆ.












Click it and Unblock the Notifications