ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಯುವ ಅಭ್ಯರ್ಥಿಗಳ ಜಿದ್ದಾಜಿದ್ದಿಗೆ ಅಖಾಡ ಸಿದ್ಧ
ಮಂಗಳೂರು, ಮಾರ್ಚ್ 24:ಅತ್ಯಂತ ಕುತೂಹಲ ಮೂಡಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜಿದ್ದಾಜಿದ್ದಿಯ ಹೋರಾಟಕ್ಕೆ ಕೊನೆಗೂ ಅಖಾಡ ಸಿದ್ಧಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಕಾಂಗ್ರೆಸ್ ಯುವ ನಾಯಕನನ್ನು ಕಣಕ್ಕಿಳಿಸಿದೆ.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ತೀವ್ರ ಸ್ಪರ್ಧೆ ಒಡ್ಡಲು ಮಿಥುನ್ ರೈ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ಕೊನೆಗೂ ಇತ್ಯರ್ಥಗೊಂಡಿದೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಹಲವಾರು ಪ್ರಭಾವಿ ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದರು.

ಈ ಹಿನ್ನೆಲೆಯಲ್ಲಿ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರನ್ನು ಹಾಗೂ ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ದಿಲ್ಲಿಗೆ ಕರೆಸಲಾಗಿತ್ತು.
ದೆಹಲಿಯಲ್ಲಿ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ಎರಡು ದಿನಗಳ ಕಾಲ ಸಭೆ ನಡೆದಿದ್ದು, ಈ ಸಂದರ್ಭ ಹೊಸ ಮುಖಕ್ಕೆ ಆದ್ಯತೆ ನೀಡಲು ರಾಜ್ಯ ನಾಯಕರು ಆಸಕ್ತಿ ತೋರಿದ್ದರಿಂದ ಮಿಥುನ್ ರೈ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಆದರೆ ಈ ಬಾರಿ ಪ್ರಭಾವಿ ಸಂಸದ ನಳಿನ್ ಅವರನ್ನು ಎದುರಿಸಲು ಹೊಸ ಮುಖವೇ ಸೂಕ್ತ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದೆ.
ನಳಿನ್ ಕುಮಾರ್ ಎದುರಾಗಿ ಮಿಥುನ್ ರೈ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಚುನಾವಣಾ ಕಣ ಇನ್ನಷ್ಟು ರಂಗು ಪಡೆದುಕೊಂಡಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನ ಯುವ ಅಭ್ಯರ್ಥಿಗಳ ಗೆಲುವಿನ ಹೋರಾಟಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವೇದಿಕೆಯಾಗಲಿದೆ.












Click it and Unblock the Notifications