ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಸಚಿವ ರಮಾನಾಥ ರೈ
ಮಂಗಳೂರು, ಫೆಬ್ರವರಿ 19 : ಅರಣ್ಯ ಮತ್ತು ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ನೀತಿ ಸಂಹಿತೆಯನ್ನು ಸಚಿವರು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
'ಮಂಗಳೂರು ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಆಗಿದ್ದ ಪ್ರಮೋದ್ ಕುಮಾರ್ ಅವರು ಅಮಾಯಕ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹಾಗಾಗಿ ಅವರನ್ನು ವರ್ಗಾವಣೆ ಮಾಡಿರುವುದಾಗಿ' ರಮಾನಾಥ ರೈ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂಬುದು ವಿವಾದಕ್ಕೆ ಕಾರಣವಾಗಿದೆ. [ನೀತಿ ಸಂಹಿತೆ ಉಲ್ಲಂಘಿಸಿದ ಮೈಸೂರು ಜಿ.ಪಂ ಅಧ್ಯಕ್ಷೆ]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ವಕೀಲೆ ಸುಮನಾ ಶರಣ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರಿಗೆ ದೂರು ನೀಡಿದ್ದಾರೆ. [ಶನಿವಾರ 15 ಜಿಲ್ಲೆಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ]
ಕೆಲವು ದಿನಗಳ ಹಿಂದೆ ಉಳಾಯಿಬೆಟ್ಟುವಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆತ ತಲೆಮರೆಸಿಕೊಂಡ ಕಾರಣ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು. ಹಾಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಆತನನ್ನು ಅಮಾಯಕ ಎಂದು ಹೇಳಿದ್ದಾರೆ. ಅಲ್ಲದೇ ತನಿಖಾಧಿಕಾರಿಗೆ ಒತ್ತಡ ಹಾಕಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಕೃತ್ಯ ನಡೆಸಿದ್ದಾರೆ. ಬಂಧನವನ್ನು ವಿರೋಧಿಸುವ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಲಾಗಿದೆ.
ಅಂದಹಾಗೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ಫೆ.21ರ ಶನಿವಾರ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ನಡೆಯಲಿದೆ.












Click it and Unblock the Notifications