ಮಹಾರಾಷ್ಟ್ರದಲ್ಲಿ ಮಳೆಯಿಂದ 129 ಮಂದಿ ಸಾವು; ರೆಡ್ ಅಲರ್ಟ್ ಘೋಷಣೆ
ಮುಂಬೈ, ಜುಲೈ 24: ಕಳೆದ ಮೂರ್ನಾಲ್ಕು ದಿನಗಳಿಂದಲೂ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ನಡೆದ ಹಲವು ದುರ್ಘಟನೆಗಳಲ್ಲಿ ರಾಜ್ಯದಲ್ಲಿ ಎರಡು ದಿನಗಳ ಅವಧಿಯಲ್ಲಿ ಸುಮಾರು 129 ಮಂದಿ ಮೃತಪಟ್ಟಿದ್ದಾರೆ.
ಕಳೆದ 48 ಗಂಟೆಗಳಲ್ಲಿ ಮಳೆಯಿಂದ ನಡೆದ ಅವಘಡಗಳಲ್ಲಿ ಸುಮಾರು 129 ಮಂದಿ ಸಾವನ್ನಪ್ಪಿರುವುದಾಗಿ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಯಗಢ ಜಿಲ್ಲೆಯ ತಲೈ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಭೂಕುಸಿತದಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಮುಂದೆ ಓದಿ...
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ
ಮೂರ್ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಕರಾವಳಿ ತೀರಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ರಸ್ತೆಗಳೆಲ್ಲಾ ನೀರಿನಿಂದ ತುಂಬಿಕೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮುಂಬೈ ನಗರದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ.
ಐದು ಲಕ್ಷ ರೂ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ರತ್ನಗಿರಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹತ್ತು ಮಂದಿ ಸಿಲುಕಿರುವ ಶಂಕೆ ವ್ಯಕ್ತಗೊಂಡಿದೆ. ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕರಾವಳಿ ಪಡೆಯ ಏಳು ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಿದೆ. ಮಳೆಯಿಂದಾಗಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ರಾಜ್ಯ ಸರ್ಕಾರ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ 36 ಮಂದಿ ಸಾವು
40 ವರ್ಷಗಳ ನಂತರ ಮಹಾರಾಷ್ಟ್ರದಲ್ಲಿ ಭಾರೀ ಮಳೆ
ಹವಾಮಾನ ಇಲಾಖೆ ರಾಜ್ಯದ ಆರು ಜಿಲ್ಲೆಗಳಿಗೆ, ರಾಯಗಢ, ರತ್ನಗಿರಿ, ಸಿಂಧು ಗರ್ಗ್, ಪುಣೆ, ಸತಾರಾ ಹಾಗೂ ಕೊಲ್ಲಾಪುರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. 40 ವರ್ಷಗಳ ನಂತರ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಮಹಾರಾಷ್ಟ್ರದ ವಿದರ್ಭಾ ಪ್ರದೇಶದಲ್ಲಿ ಮುಂದಿನ ಎರಡು ದಿನ ಅತಿ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಮುಂಬೈನಲ್ಲಿ ಈಗಾಗಲೇ 890 ಎಂ.ಎಂ. ಹೆಚ್ಚಿನ ಮಳೆ ದಾಖಲಾಗಿದೆ.
ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ
ನೌಕಾಸೇನೆಯಿಂದ ಎರಡು ತಂಡಗಳು, ಹನ್ನೆರಡು ಸ್ಥಳೀಯ ರಕ್ಷಣಾ ತಂಡಗಳು, ಎರಡು ಕರಾವಳಿ ರಕ್ಷಣಾ ಪಡೆಗಳು ಹಾಗೂ ಎನ್ಡಿಆರ್ಎಫ್ ಸಿಬ್ಬಂದಿಯನ್ನು ಪ್ರವಾಹಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಹಾರಾಷ್ಟದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.