ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ 36 ಮಂದಿ ಸಾವು
ಮುಂಬೈ, ಜುಲೈ 23: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 36 ಮಂದಿ ಮೃತಪಟ್ಟಿದ್ದಾರೆ.
ಮೂರ್ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಸೃಷ್ಟಿಯಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ರಾಯಗಢದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವ ಜನರನ್ನು ಎನ್ಡಿಆರ್ಎಫ್ ಸಿಬ್ಬಂದಿ ಹೆಲಿಕಾಪ್ಟರ್ಗಳನ್ನು ಬಳಸಿ ರಕ್ಷಣೆ ಮಾಡುತ್ತಿದ್ದಾರೆ.
40 ವರ್ಷಗಳ ನಂತರ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂಬೈ ನಗರದಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಎನ್ಡಿಆರ್ ಸಿಬ್ಬಂದಿ ಜನರ ರಕ್ಷಣಾ ಕೆಲಸದಲ್ಲಿ ನಿರತರಾಗಿದ್ದಾರೆ.

ಗುರುವಾರ ರಾಯಗಢದ ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇದುವರೆಗೂ 32 ಮೃತದೇಹಗಳು ಭೂಕುಸಿತವಾದ ಪ್ರದೇಶದಲ್ಲಿ ಸಿಕ್ಕಿವೆ. ಇನ್ನುಳಿದ ನಾಲ್ಕು ಮೃತದೇಹಗಳು ಬೇರೆ ಕಡೆಗಳಲ್ಲಿ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೌಕಾಸೇನೆಯಿಂದ ಎರಡು ತಂಡಗಳು, ಹನ್ನೆರಡು ಸ್ಥಳೀಯ ರಕ್ಷಣಾ ತಂಡಗಳು, ಎರಡು ಕರಾವಳಿ ರಕ್ಷಣಾ ಪಡೆಗಳು ಹಾಗೂ ಎನ್ಡಿಆರ್ಎಫ್ ಸಿಬ್ಬಂದಿಯನ್ನು ಪ್ರವಾಹಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಹಾರಾಷ್ಟದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಈ ವರ್ಷ ಅಧಿಕ ಮಳೆಯಾಗುತ್ತಿದ್ದು, ಇದುವರೆಗೂ 1971.3 ಎಂಎಂ ಮಳೆಯಾಗಿದೆ. ಮುಂಬೈ ನಗರಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ವಿದರ್ಭಾ ಪ್ರದೇಶದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications