ಮುಂಬೈನ ಧಾರಾವಿಯಲ್ಲಿ ಮೂರನೇ ಕೊರೊನಾ ಪ್ರಕರಣ ದೃಢ
ಮುಂಬೈ, ಏಪ್ರಿಲ್ 3: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತಿದ್ದು, ವಿಶ್ವದ ಅತಿ ದೊಡ್ಡ ಕೊಳಗೇರಿಯಾಗಿರುವ ಧಾರಾವಿಯಲ್ಲಿ ಮೂರನೇ ಪ್ರಕರಣ ದಾಖಲಾಗಿದೆ.
ಗುರುವಾರವಷ್ಟೇ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಒಂದೇ ದಿನದಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.
ಧಾರಾವಿಯಲ್ಲಿ ಮುಖ್ಯರಸ್ತೆಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ 35 ವರ್ಷದ ವೈದ್ಯರೊಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಕುರಿತಂತೆ ಬಿಎಂಸಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಇವರು ಖಾಸಗಿ ಆಸ್ಪತ್ರೆಯಲ್ಲಿ ಸರ್ಜನ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಸ್ತುತ ಈ ವೈದ್ಯರಿದ್ದ ಬಿಲ್ಡಿಂಗ್ ಅನ್ನು ಕ್ವಾರಂಟೈನ್ ಮಾಡಲಾಗಿದ್ದು, ಇವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಗಳಿಗಾಗಿ ಶೋಧನಡೆಸಲಾಗುತ್ತಿದೆ.
ಏಷ್ಯಾದ ಅತಿ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಕೊರೊನಾದಿಂದ ವ್ಯಕ್ತಿ ಸಾವು!
ಈ ವೈದ್ಯರು ಯಾವುದೇ ರೀತಿಯ ವಿದೇಶಿ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ದೇಶದಲ್ಲಿ ಮೂರನೇ ಹಂತದಲ್ಲಿ ಕೊರೊನಾ ಸೋಂಕು ಹರಡುತ್ತಿದೆ.ಸುಮಾರು 10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ, ಏಷ್ಯಾದ ಅತಿ ದೊಡ್ಡ ಸ್ಲಂ ಎನಿಸಿಕೊಂಡಿರುವ ಧಾರಾವಿಯಲ್ಲಿ ಮೂರನೇ ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.
52 ವರ್ಷದ ಬಿಎಂಸಿ(ಬೃಹನ್ಮುಂಬೈ ಮುನಿಸಿಪಲ್ ಕಾರ್ಪೋರೇಶನ್) ಸ್ಯಾನಿಟೈಸೇಶನ್ ಕೆಲಸಗಾರನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈತ ವರ್ಲಿ ಪ್ರದೇಶದ ನಿವಾಸಿಯಾಗಿದ್ದು, ಇತ್ತೀಚೆಗೆ ಧಾರಾವಿಯಲ್ಲಿ ಕೆಲಸ ಮಾಡಲು ವರ್ಗಾಯಿಸಲಾಗಿತ್ತು.
ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆ ಬಿಎಂಸಿ ಅಧಿಕಾರಿಗಳು ಆತನಿಗೆ ಪರೀಕ್ಷೆ ಮಾಡಿಸುವಂತೆ ಸೂಚಿಸಿದ್ದರು.
ಸದ್ಯ ರೋಗಿ ಸ್ಥಿತಿ ಸ್ಥಿರವಾಗಿದೆ. ಆದರೆ ಆತನ ಕುಟುಂಬ ಹಾಗೂ ಆತನ ಜೊತೆಗೆ ಕೆಲಸ ಮಾಡುತ್ತಿದ್ದ 23 ಮಂದಿಯನ್ನು ಗೃಹಬಂಧನದಲ್ಲಿ ಇರುವಂತೆ ಸೂಚಿಸಲಾಗಿದೆ.
ಬುಧವಾರ ಧಾರಾವಿಯ 46 ವರ್ಷದ ವ್ಯಕ್ತಿಯೋರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದನು. ಈ ಸುದ್ದಿ ತಿಳಿಯುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದೇ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ವರದಿಯಾಗಿದ್ದು ಆತಂಕವನ್ನು ಹೆಚ್ಚು ಮಾಡಿದೆ.
ರಾಜ್ಯ ಸರ್ಕಾರದ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರ ಯೋಜನೆಯಲ್ಲಿ ಕಟ್ಟಿಕೊಟ್ಟಿದ್ದ ಕಟ್ಟಡದಲ್ಲಿ ಮೃತ ವ್ಯಕ್ತಿ ವಾಸಿಸುತ್ತಿದ್ದನು. ಈ ವ್ಯಕ್ತಿ ಮೃತಪಟ್ಟ ಬಳಿಕ ಇಡೀ ಕಟ್ಟಡದಲ್ಲಿದ್ದ ಎಲ್ಲಾ ಮಂದಿಯನ್ನು ಕ್ವಾರಂಟೈನ್ ಮಾಡಿ, ನಿಗಾ ಇಡಲಾಗಿದೆ.
ಆದರೆ ಈ ವ್ಯಕ್ತಿ ವಿದೇಶ ಪ್ರಯಾಣ ಮಾಡಿರಲಿಲ್ಲ, ಸೋಂಕಿತರ ಜೊತೆ ಸಂಪರ್ಕದಲ್ಲಿಯೂ ಈತ ಇರಲಿಲ್ಲ. ಆದರೆ ಬುಧವಾರ ಸಿಯಾನ್ ಆಸ್ಪತ್ರೆಯಲ್ಲಿ ಸೋಂಕಿತ ಸಾವನ್ನಪ್ಪಿದ್ದನು.