ಸಾವಿನ ಸೂಚನೆ: ಪ್ರತಿನಿತ್ಯ ಕೊರೊನಾಗೆ 1,000 ಮಂದಿ ಸಾವು!
ಮುಂಬೈ, ಮಾರ್ಚ್ 25: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಮುಂದಿನ 11 ದಿನಗಳಲ್ಲಿ ಮಿತಿ ಮೀರಲಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ 4ರ ವೇಳೆಗೆ ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ ಗಡಿ ದಾಟಲಿದೆ. 61125 ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಪುಣೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ನಾಗ್ಪುರ್ ಜಿಲ್ಲೆಯಲ್ಲಿ 47,707 ಸಕ್ರಿಯ ಪ್ರಕರಣಗಳಿದ್ದರೆ ಮುಂಬೈನಲ್ಲಿ 32,927 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ಹುಷಾರ್: ಭಾರತದಲ್ಲಿ 50,000ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ!
ಮಹಾರಾಷ್ಟ್ರದ ನಾಗ್ಪುರ್ ಮತ್ತು ಪುಣೆ ಜಿಲ್ಲೆಯಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಹಲವು ಜಿಲ್ಲೆಗಳಲ್ಲಿ ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ವ್ಯವಸ್ಥೆಯ ಕೊರತೆ ಎದ್ದು ಕಾಣುತ್ತಿದೆ. ಈ ಹಿನ್ನೆಲೆ ಮುಂದಿನ 11 ದಿನಗಳಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 64,000 ಗಡಿ ದಾಟಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ.
ಮಹಾರಾಷ್ಟ್ರದಲ್ಲೇ ಪ್ರತಿನಿತ್ಯ 1000 ಮಂದಿ ಬಲಿ
ರಾಜ್ಯದಲ್ಲಿ ಪ್ರಸ್ತುತ ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಅವಲೋಕಿಸಿದಾಗ ಪ್ರತಿವಾರವೂ ಶೇ.1ರಷ್ಟು ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದೆ. ಈ ಸೋಂಕಿತ ಪ್ರಕರಣಗಳನ್ನು ಎಲ್ಲ ಜಿಲ್ಲೆಗಳೊಂದಿಗೆ ಹೋಲಿಕೆ ಮಾಡಿ ನೋಡಲಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ ಸಾವಿನ ಶೇಕಡಾವಾರು ಪ್ರಮಾಣ 2.27ರಷ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,24,328ಕ್ಕೆ ಏರಿಕೆಯಾಗಲಿದ್ದು, ಈ ಅಂಕಿ-ಸಂಖ್ಯೆಗಳನ್ನು ಅವಲೋಕಿಸಿದಾಗ ರಾಜ್ಯದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದೆ. ಮುಂದಿನ ಎರಡು ವಾರಗಳ ನಂತರ ಪ್ರತಿನಿತ್ಯ 1000 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಡಲಿದ್ದಾರೆ ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ 24 ಗಂಟೆಗಳಲ್ಲಿ 38,000 ಮಂದಿಗೆ ಕೊರೊನಾವೈರಸ್
ಮಹಾರಾಷ್ಟ್ರದಲ್ಲಿ ಒಂದೇ ದಿನ 31,855 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 25,64,881ಕ್ಕೆ ಏರಿಕೆಯಾಗಿದ್ದು, 2,47,299 ಸಕ್ರಿಯ ಪ್ರಕರಣಗಳು ವರದಿಯಾಗಿದೆ. ಇದೇ 24 ಗಂಟೆಗಳಲ್ಲಿ 15098 ಮಂದಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದರೆ, 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ ಕೊರೊನಾವೈರಸ್ ಸೋಂಕಿನಿಂದ 53684 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊವಿಡ್-19 ಸೋಂಕಿತರ ಚಿಕಿತ್ಸೆಗೆ ಬೆಡ್ ಕೊರತೆ
ಮಹಾರಾಷ್ಟ್ರದಲ್ಲಿ ಏರಿಕೆ ಆಗುತ್ತಿರುವ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್ ಬೆಡ್, ಐಸಿಯು ಬೆಡ್ ಮತ್ತು ವೆಂಟಿಲೇಟರ್ ಸಹಿತ ಬೆಡ್ ಅಭಾವ ಎದುರಾಗುವ ಆತಂಕವಿದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ನಾಗ್ಪುರ್ ಮತ್ತು ಪುಣೆ ಜಿಲ್ಲೆಗಳಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಮಿತಮೀರಿ ಬೆಳೆಯುತ್ತಿದೆ. ಇಂಥ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ಬೆಡ್ ವ್ಯವಸ್ಥೆ ಸಿಗುವುದು ಅನುಮಾನವಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಬೆಡ್ ಅಭಾವ ಎದುರಿಸಬೇಕಾಗಬಹುದು ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.
ರಾಜ್ಯವಾರು ಕೊರೊನಾವೈರಸ್ ಲಸಿಕೆ ವಿತರಣೆ
ಮಹಾರಾಷ್ಟ್ರದಲ್ಲಿ 6,72,128 ಫಲಾನುಭವಿಗಳಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. 50,14,774 ಮಂದಿಗೆ ಮೊದಲ ಡೋಸ್ ನೀಡಲಾಗಿದೆ. ಭಾರತದಲ್ಲಿ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ವಿತರಿಸಿದ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 50,14,774 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ರಾಜಸ್ಥಾನದಲ್ಲಿ 49,94,574 ಮಂದಿಗೆ ಲಸಿಕೆ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ 47,56,799 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಗುಜರಾತ್ 43,81,814 ಮತ್ತು ಪಶ್ಚಿಮ ಬಂಗಾಳದಲ್ಲಿ 42,50,140 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.
50,000 ದಾಟಿದ ಕೊರೊನಾವೈರಸ್ ಸೋಂಕಿತ ಪ್ರಕರಣ
ಭಾರತದಲ್ಲಿ ಒಂದೇ ದಿನ 53476 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,17,87,534ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 26,490 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,12,31,650 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 251 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಈವರೆಗೂ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,60,692ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ 3,95,192 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.