ಮಹಾ ಲೆಟರ್ ಬಾಂಬ್ ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಎಚ್ಕೆ ಪಾಟೀಲ್ ಪ್ರತಿಕ್ರಿಯೆ
ಮುಂಬೈ, ಮಾರ್ಚ್22: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಎಸೆದಿರುವ ಲೆಟರ್ ಬಾಂಬ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಎಲ್ಲಾ ಕಡೆಗಳಿಂದಲೂ ಒತ್ತಡಕ್ಕೆ ಒಳಗಾಗುತ್ತಿರುವ ಮೈತ್ರಿಕೂಟ ಇಂದು ಪರಮ್ ಬೀರ್ ಸಿಂಗ್ ಅವರನ್ನು ಕರ್ತವ್ಯದಿಂದ ತೆಗೆದು ಹಾಕಲು ಸೂಚಿಸಿದರೂ ಅಚ್ಚರಿಯೇನಿಲ್ಲ ಎಂಬ ಸುದ್ದಿ ಬಂದಿದೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸಿಎಂ ಉದ್ಧವ್ ಠಾಕ್ರೆ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ, 100 ಕೋಟಿ ಹಫ್ತಾ ವಸೂಲಿ ಮಾಡಲು ಇಲಾಖೆಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಂದ ಸೂಚನೆ ಬಂದಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದಿರುವ ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶಮುಖ್ ಆರೋಪವನ್ನು ಅಲ್ಲಗೆಳೆದಿದ್ದಾರೆ

ಎಚ್ ಕೆ ಪಾಟೀಲ್ ಪ್ರತಿಕ್ರಿಯೆ: ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿ ಎಚ್ ಕ್ ಪಾಟೀಲ್ ಅವರು ಇಂದು ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಬಾಳಾ ಸಾಹೇಬ್ ಥೋರಟ್ ಹಾಗೂ ಅಶೋಕ್ ಚವಾಣ್ ಅವರು ಇಂದು ಸಿಎಂ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಲಿದ್ದಾರೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಈಗಾಗಲೇ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಬಗ್ಗೆ ಕೂಡಾ ಚರ್ಚೆ ನಡೆಯಲಿದೆ, ಬದಲಿ ಮಾರ್ಗದ ಬಗ್ಗೆ ಕೂಡಾ ಚಿಂತಿಸಲಾಗುತ್ತಿದೆ ಎಂದಿದ್ದಾರೆ.
ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿಯ ಪ್ರಮುಖರು ತಮ್ಮ ಅಭಿಪ್ರಾಯವನ್ನು ಈಗಾಗಲೇ ಸಿಎಂ ಬಳಿ ಚರ್ಚಿಸಿದ್ದಾರೆ. ಸಂಜೆ ವೇಳೆಗೆ ಈ ಬಗ್ಗೆ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು.
ಈ ನಡುವೆ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ಇಂಡು ಎಟಿಎಸ್ ಮುಖ್ಯಸ್ಥ ಜೈ ಜೀತ್ ಸಿಂಗ್ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಗೃಹ ರಕ್ಷಕ ಇಲಾಖೆಯ ಕಚೇರಿಗೆ ಆಗಮಿಸಿದ್ದಾರೆ. ಸದ್ಯ ಅವರನ್ನು ಈ ಇಲಾಖೆಯ ಡಿಜಿ ಆಗಿ ವರ್ಗಾವಣೆ ಮಾಡಲಾಗಿದೆ.
ಸಂಜೆ ವೇಳೆಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ರಾಜೀನಾಮೆ ಸಲ್ಲಿಸದಿದ್ದರೆ ಮಾರ್ಚ್ 24ರಂದು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿ ಮಾಡಿ ಚರ್ಚಿಸಲು ಬಿಜೆಪಿ ಮುಂದಾಗಿದೆ.












Click it and Unblock the Notifications