ಎನ್ಸಿಪಿಯ ಅಜಿತ್ 'ದಾದಾ' ನಮ್ಮ ಜತೆ ಇದ್ದಾರೆ: ಶಿವಸೇನಾ
ಮುಂಬೈ, ನವೆಂಬರ್ 26: ಬಿಜೆಪಿ ಜತೆಗೂಡಿ ಬೆಳ್ಳಂಬೆಳಿಗ್ಗೆ ಉಪಮುಖ್ಯಮಂತ್ರಿಯಾಗಿದ್ದ ಎನ್ಸಿಪಿ ಮುಖಂಡ ಅಜಿತ್ ಪವಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದನ್ನು ಶಿವಸೇನಾ ಸ್ವಾಗತಿಸಿದೆ. ಅಜಿತ್ ಪವಾರ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದ ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟದೊಂದಿಗೆ ಇದ್ದಾರೆ ಎಂದು ಹೇಳಿದೆ.
ಅಜಿತ್ ಪವಾರ್ ಅವರ ರಾಜೀನಾಮೆ ಬಳಿಕ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ ಮುಖಂಡ ಸಂಜಯ್ ರಾವತ್, 'ಅಜಿತ್ ದಾದಾ ರಾಜೀನಾಮೆ ನೀಡಿದ್ದಾರೆ ಮತ್ತು ಅವರು ನಮ್ಮೊಂದಿಗೆ ಇದ್ದಾರೆ. ಉದ್ಧವ್ ಠಾಕ್ರೆ ಅವರು ಮುಂದಿನ ಐದು ವರ್ಷಗಳವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರಲಿದ್ದಾರೆ' ಎಂದು ಹೇಳಿದರು.
ಅಜಿತ್ ಪವಾರ್ ಅವರೊಂದಿಗೆ ಶಿವಸೇನಾ ಸಂಪರ್ಕ ಸಾಧಿಸಿರುವುದಾಗಿ ರಾವತ್ ತಿಳಿಸಿದರು.

ಶನಿವಾರ ರಾತ್ರಿ ಬೆಳಗಾಗುವುದರಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚಿಸಲು ಮುಂದಾಗಿದ್ದ ಎನ್ಸಿಪಿ ಮುಖಂಡ ಅಜಿತ್ ಪವಾರ್, ಉಪ ಮುಖ್ಯಮಂತ್ರಿ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ಸಿಪಿ ಮೈತ್ರಿ ಸರ್ಕಾರ ನಾಲ್ಕು ದಿನಗಳಲ್ಲಿಯೇ ಪತನಗೊಂಡಂತಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ದೇವೇಂದ್ರ ಫಡ್ನವಿಸ್ ಬುಧವಾರ ತಮ್ಮ ಬಹುಮತ ಸಾಬೀತುಪಡಿಸಬೇಕಾಗಿತ್ತು. ಆದರೆ ಅದಕ್ಕೂ ಮೊದಲೇ ಅವರು ಹುದ್ದೆ ತ್ಯಜಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.
ಈ ಹಿಂದೆ ನಡೆದ ಮಾತುಕತೆ ಪ್ರಕಾರ ತ್ರಿಪಕ್ಷೀಯ ಮೈತ್ರಿಕೂಟದಲ್ಲಿ ಅಜಿತ್ ಪವಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಗಮನಕ್ಕೂ ಬಾರದಂತೆ ಬಿಜೆಪಿ ಜತೆ ಕೈಜೋಡಿಸುವ ಮೂಲಕ ಪಕ್ಷಕ್ಕೆ ಆಘಾತ ಉಂಟುಮಾಡಿದ್ದ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉಚ್ಚಾಟಿಸಲಾಗಿತ್ತು. ಪಕ್ಷದಿಂದಲೂ ಉಚ್ಚಾಟಿಸುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಈಗ ಅಜಿತ್ ಪವಾರ್ ಪಕ್ಷಕ್ಕೆ ಮರಳಿದ್ದಾರೆ. ಅವರಿಗೆ ಸರ್ಕಾರದಲ್ಲಿ ಯಾವುದಾದರೂ ಹುದ್ದೆ ಸಿಗಲಿದೆಯೇ ಅಥವಾ ಪಕ್ಷದ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಶಿಕ್ಷೆ ಎದುರಿಸುವಂತಾಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.












Click it and Unblock the Notifications