ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅನಿಲ್ ದೇಶ್ಮುಖ್ ಮೇಲ್ಮನವಿ
ಮುಂಬೈ, ಏಪ್ರಿಲ್ 6: ಭ್ರಷ್ಟಾಚಾರ ಆರೋಪ ಹೊತ್ತು ರಾಜೀನಾಮೆ ಸಲ್ಲಿಸಿರುವ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಲು ಮುಂದಾಗಿದ್ದಾರೆ. ದೇಶ್ಮುಖ್ ಬೆನ್ನ ಹಿಂದೆ ಮಹಾರಾಷ್ಟ್ರ ಸರ್ಕಾರ ಕೂಡಾ ನಿಲ್ಲಲಿದೆ. ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ ನೀಡಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಹಾಕಲಾಗುವುದು ಎಂದು ಅನಿಲ್ ಅವರು ಹೇಳಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿದ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲು ಸಿಬಿಐಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಲಭ್ಯ ಮಾಹಿತಿ ಪ್ರಕಾರ ಹಿರಿಯ ನ್ಯಾಯವಾದಿ ಡಾ. ಅಭಿಷೇಕ್ ಮನು ಸಿಂಘ್ವಿ ಅವರು ಮಹಾರಾಷ್ಟ್ರ ಸರ್ಕಾರದ ಪರ ವಾದ ಮಂಡಿಸಲಿದ್ದಾರೆ.
ಲೆಟರ್ ಬಾಂಬ್: ಏನಿದು ಪರಮ್ ಬೀರ್ ಸಿಂಗ್ v/s ಅನಿಲ್ ದೇಶಮುಖ್ ಗಲಾಟೆ
ಮಹಾರಾಷ್ಟ್ರ ಸರ್ಕಾರವು ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದ ಸಮಿತಿಗೆ ನೀಡಿದೆ ಈ ಪ್ರಕರಣದ ತನಿಖೆ ನಡೆದಿರುವಾಗ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸಿದೆ. ಆದರೆ, ತಕ್ಷಣಕ್ಕೆ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ಅಗತ್ಯವಿಲ್ಲ ಎಂದಿರುವ ನ್ಯಾಯಾಲಯ, ಹದಿನೈದು ದಿನಗಳ ಒಳಗೆ ಪ್ರಾಥಮಿಕ ತನಿಖೆ ಪೂರ್ಣಗೊಳಿಸುವಂತೆ ಆದೇಶಿಸಿದೆ.
ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಯಶ್ರೀ ಪಾಟೀಲ್ ಎಂಬುವವರ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ ನ್ಯಾಯಾಲಯ, ಪರಮ್ ಬೀರ್ ಸಿಂಗ್, ವಕೀಲರಾದ ಘನಶ್ಯಾಮ್ ಉಪಾಧ್ಯಾಯ್ ಮತ್ತು ಮೋಹನ್ ಭಿಡೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
Recommended Video
ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಪೋಟಕ ವಾಹನ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಪರಮ್ ಬೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದಿದ್ದಾರೆನ್ನಲಾದ ಪತ್ರದಲ್ಲಿ ಲಂಚದ ಬಗ್ಗೆ ಪ್ರಸ್ತಾಪಿಸಿ ಅನಿಲ್ ವಿರುದ್ಧ ಆರೋಪ ಮಾಡಲಾಗಿದೆ. ಈ ಬಗ್ಗೆ ಅನಿಲ್ ದೇಶ್ ಮುಖ್ ಸ್ಪಷ್ಟನೆ ನೀಡಿ, ಆರೋಪಗಳನ್ನು ತಳ್ಳಿ ಹಾಕಿದ್ದರು.