ಪಂಚರಾಜ್ಯ ಚುನಾವಣೆ: "ಅಸ್ಸಾಂ ಹೊರತಾಗಿ ಎಲ್ಲ ಕಡೆ ಬಿಜೆಪಿಗೆ ಸೋಲು ನಿಶ್ಚಿತ"
ಮುಂಬೈ, ಮಾರ್ಚ್ 15: ಮುಂದಿನ ಎರಡು ತಿಂಗಳಿನಲ್ಲಿ ನಡೆಯಲಿರುವ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಪೈಕಿ ಬಿಜೆಪಿಯು ನಾಲ್ಕು ಕಡೆಗಳಲ್ಲಿ ಸೋಲು ಅನುಭವಿಸಲಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.
ಮಹಾರಾಷ್ಟ್ರದ ಬಾರಮತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಿನ ಟ್ರೆಂಡ್ ಪ್ರಕಾರ ಬಿಜೆಪಿಯು ಅಸ್ಸಾಂನಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಮೂರು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಮುಖಭಂಗ ಅನುಭವಿಸಲಿದೆ ಎಂದು ಹೇಳಿದ್ದಾರೆ.
ಬಂಗಾಳದಲ್ಲಿ ಮೂವರು ಸಂಸದರನ್ನು ವಿಧಾನಸಭಾ ಕಣಕ್ಕಿಳಿಸಿದ ಬಿಜೆಪಿ!
ಇಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡುವುದೇ ತಪ್ಪು. ಈ ಕುರಿತು ಆಯಾ ರಾಜ್ಯಗಳ ಮತದಾರರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೇರಳದಲ್ಲಿ ಎಡಪಕ್ಷಗಳು ಮತ್ತು ಎನ್ ಸಿಪಿ ಒಗ್ಗಟ್ಟಾಗಿದ್ದು, ಅಲ್ಲಿ ನಮಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಡಿಎಂಕೆಗೆ ಅಧಿಕಾರ:
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದ್ರಾವಿಡ ಮುನ್ನೇತ್ರ ಕಾಳಗಂ(ಡಿಎಂಕೆ)ಗೆ ಮತದಾರರು ಬೆಂಬಲ ವ್ಯಕ್ತಪಡಿಸಲಿದ್ದಾರೆ. ರಾಜ್ಯದಲ್ಲಿ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟ್ಯಾಲಿನ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ಅಧಿಕಾರ ದುರುಪಯೋಗ:
ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. ರಾಜ್ಯದ ಜನರಿಗೋಸ್ಕರ ಹೋರಾಡುತ್ತಿರುವ ಸಹೋದರಿ(ಮಮತಾ ಬ್ಯಾನರ್ಜಿ) ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎಂದು ದೂಷಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಟಿಎಂಸಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಶರದ್ ಪವಾರ್ ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿಗೆ ಉತ್ತಮ ಸ್ಪಂದನೆ:
ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮೂಲದ ಪ್ರಕಾರ, ಸದ್ಯ ಅಸ್ಸಾಂನಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅಸ್ಸಾಂನಲ್ಲಿ ಬಿಜೆಪಿ ಉತ್ತಮವಾಗಿದ್ದು, ಈ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯುವ ಸಾಧ್ಯತೆಗಳಿವೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಯಾವ ಯಾವ ರಾಜ್ಯಗಳಲ್ಲಿ ಚುನಾವಣೆ:
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭೆಗೆ ಚುನಾವಣೆಗೆ ಕಳೆದ ಫೆಬ್ರವರಿ.26ರಂದೇ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಮಾರ್ಚ್.27ರಿಂದ ಏಪ್ರಿಲ್ ವರೆಗೂ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.