ಭ್ರಷ್ಟಾಚಾರ ಆರೋಪ: ರಾಜೀನಾಮೆ ಸಲ್ಲಿಸಿದ ಗೃಹ ಸಚಿವ ಅನಿಲ್ ದೇಶ್ಮುಖ್
ಮುಂಬೈ, ಏಪ್ರಿಲ್ 05: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿಸಿಲುಕಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಎನ್ಸಿಪಿ ಮೂಲಗಳು ಹೇಳಿವೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ 15 ದಿನಗಳ ಒಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿತ್ತು.
ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಯಶ್ರೀ ಪಾಟೀಲ್ ಎಂಬುವವರ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ ನ್ಯಾಯಾಲಯ, ಪರಮ್ ಬೀರ್ ಸಿಂಗ್, ವಕೀಲರಾದ ಘನಶ್ಯಾಮ್ ಉಪಾಧ್ಯಾಯ್ ಮತ್ತು ಮೋಹನ್ ಭಿಡೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತು.
ಲೆಟರ್ ಬಾಂಬ್: ಏನಿದು ಪರಮ್ ಬೀರ್ ಸಿಂಗ್ v/s ಅನಿಲ್ ದೇಶಮುಖ್ ಗಲಾಟೆ
ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಪೋಟಕ ವಾಹನ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಪರಮ್ ಬೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದಿದ್ದಾರೆನ್ನಲಾದ ಪತ್ರದ ಬಗ್ಗೆ ಅನಿಲ್ ದೇಶ್ ಮುಖ್ ಸ್ಪಷ್ಟನೆ ನೀಡಿದ್ದರು.