ಮಹಾರಾಷ್ಟ್ರದಲ್ಲಿ ಲಾಕ್ ಡೌನ್: ಸಿಎಂ ಉದ್ಧವ್ ಠಾಕ್ರೆ ಹೇಳಿದ್ದೇನು?
ಮುಂಬೈ, ಮಾರ್ಚ್01: ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಉದ್ದೇಶ ನನಗೂ ಇಲ್ಲ ಆದರೆ ರಾಜ್ಯದಲ್ಲಿ ಅಸಹಾಯಕ ಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇದಿನೆ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಉಲ್ಲೇಖಿಸಿದರು. ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ 6000ಕ್ಕಿಂತ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣ ವರದಿಯಾಗುತ್ತಿವೆ. ಕಳೆದ ವಾರ ಪ್ರತಿದಿನ 8000 ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ.
ಬೆಂಗಳೂರಿನ ಪ್ರತಿ ಕೇಂದ್ರದಲ್ಲಿ 200 ಮಂದಿಗೆ ಕೊರೊನಾ ಲಸಿಕೆ
ಎರಡು ವಾರಗಳಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಬಾರದಿದ್ದರೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದರು. ಇದೀಗ ಅನಿವಾರ್ಯ ಸ್ಥಿತಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎನ್ನುವ ಧಾಟಿಯಲ್ಲಿ ಸಿಎಂ ಉದ್ಧವ್ ಠಾಕ್ರೆ ಮಾತನಾಡಿದ್ದಾರೆ.
ಸೋಮವಾರ 8293 ಮಂದಿಗೆ ಕೊರೊನಾವೈರಸ್:
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 8293 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 3753 ಮಂದಿ ಗುಣಮುಖರಾಗಿದ್ದರೆ, 62 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 52154 ಮಂದಿ ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ. ಕೊರೊನಾವೈರಸ್ ಸೋಂಕಿನಿಂದ 20,24,704 ಮಂದಿ ಗುಣಮುಖರಾಗಿದ್ದಾರೆ.
ಕೊವಿಡ್-19 ನಿಯಮ ಪಾಲಿಸಿ ಎಂದಿದ್ದ ಸಿಎಂ:
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ನಿಯಮಗಳು ಮತ್ತು ಶಿಷ್ಟಾಚಾರವನ್ನು ಪಾಲಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಕೊವಿಡ್-19 ಪ್ರಕರಣಗಳ ಸಂಖ್ಯೆ ಇದೇ ರೀತಿ ಏರಿಕೆಯಾದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುವ ಮುನ್ಸೂಚನೆಯನ್ನೂ ನೀಡಿದ್ದರು.