Breaking: ಮಹಾರಾಷ್ಟ್ರ ನೂತನ ಸಿಎಂ, ಡಿಸಿಎಂಗೆ ಪ್ರಧಾನಿ ಮೋದಿ ಅಭಿನಂದನೆ
ಮುಂಬೈ, ಜೂನ್ 30: ಮಹಾರಾಷ್ಟ್ರದ 19ನೇ ಮುಖ್ಯಮಂತ್ರಿ ಆಗಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಪದಗ್ರಹಣ ಮಾಡಿದ್ದಾರೆ.
ಗುರುವಾರ ಸಂಜೆ 7.30ಕ್ಕೆ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ನೂತನ ಸಿಎಂ ಮತ್ತು ಡಿಸಿಎಂಗೆ ಪ್ರಮಾಣವಚನ ಬೋಧಿಸಿದ್ದಾರೆ.
Eknath Shinde Oath Taking Ceremony LIVE: ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ಫಡ್ನವೀಸ್ ಪ್ರಮಾಣವಚನ
ಮರಾಠಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಬಾಳಾಸಾಹೇಬ್ ಠಾಕ್ರೆ ಅನ್ನು ಸ್ಮರಿಸಿಕೊಂಡರು. ಮಹಾರಾಷ್ಟ್ರದ ಜನತೆ ಮತ್ತು ಶಿವಸೇನೆಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಪ್ರಧಾನಿ ಶುಭಾಶಯ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಏಕನಾಥ್ ಶಿಂಧೆ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ತಳಮಟ್ಟದ ನಾಯಕ, ಅವರು ಶ್ರೀಮಂತ ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ಹೊಂದಿದ್ದಾರೆ. ಆ ಮೂಲಕ ಮಹಾರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ದೇವೇಂದ್ರಗೂ ಪ್ರಧಾನಿ ಮೋದಿ ಅಭಿನಂದನೆ: "ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್ ಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ಸ್ಪೂರ್ತಿಯಾಗಿದ್ದಾರೆ. ಅವರ ಅನುಭವ ಮತ್ತು ಪರಿಣತಿ ಸರ್ಕಾರದ ಆಸ್ತಿಯಾಗಲಿದೆ. ಅವರು ಮಹಾರಾಷ್ಟ್ರದ ಬೆಳವಣಿಗೆಯ ಪಥವನ್ನು ಇನ್ನಷ್ಟು ಬಲಪಡಿಸುತ್ತಾರೆ ಎಂದು ನನಗೆ ಖಾತ್ರಿಯಿದೆ," ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.