ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ದೇಶಮುಖ್ ಪುತ್ರನೂ ಭಾಗಿ
ಮುಂಬೈ, ನವೆಂಬರ್ 23: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರ ಪುತ್ರ ಹೃಷಿಕೇಶ್ ದೇಶಮುಖ್ ಕೂಡಾ ಸಕ್ರಿಯನಾಗಿದ್ದನು ಎಂದು ಜಾರಿ ನಿರ್ದೇಶನಾಲಯ ವಿಶೇಷ ಕೋರ್ಟ್ಗೆ ಮಾಹಿತಿ ನೀಡಿದೆ.
ಒಂದು ವೇಳೆ, ಹೃಷಿಕೇಶ್ ದೇಶಮುಖ್ಗೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದರೆ, ಸಾಕ್ಷ್ಯ ನಾಶಕ್ಕೆ ಆರೋಪಿ ಪ್ರಯತ್ನ ಮಾಡಬಹುದು ಅಥವಾ ಬೇರೆ ಅಪರಾಧಗಳನ್ನು ಮಾಡಬಹುದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಫಿಡವಿಟ್ನಲ್ಲಿ ಉಲ್ಲೇಖಿಸಿದ್ದಾರೆ.
ಹೃಷಿಕೇಶ್ ದೇಶಮುಖ್ ವಿಶೇಷ ಕೋರ್ಟ್ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ವಿರುದ್ಧವಾಗಿ ಅಫಿಡವಿಟ್ ಸಲ್ಲಿಕೆ ಮಾಡಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೃಷಿಕೇಶ್ ದೇಶಮುಖ್ ತನ್ನ ತಂದೆ ಅಕ್ರಮವಾಗಿ ಸಂಪಾದನೆ ಮಾಡಿದ ಹಣವನ್ನು ದೇಣಿಗೆಯಿಂದ ಬಂದಿದೆ ಎಂದು ತೋರಿಸಲು ಸಹಕಾರ ನೀಡಿದ್ದನು ಎಂದು ಸ್ಪಷ್ಟನೆ ನೀಡಿದೆ.

ಇಷ್ಟೇ ಅಲ್ಲದೇ ಈಗಾಗಲೇ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಕೂಡಾ ಹಣವನ್ನು ವರ್ಗಾವಣೆ ಮಾಡಿರುವ ಆರೋಪದಲ್ಲಿ ಇದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹೇಳಿದ್ದಾರೆ. ಸದ್ಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಕೋರ್ಟ್ ಡಿಸೆಂಬರ್ 4ಕ್ಕೆ ಮುಂದೂಡಿದೆ.
ತನ್ನದೇ ಕಂಪನಿಗಳಿಗೆ ಹಣ ವರ್ಗಾವಣೆ: ಅನಿಲ್ ದೇಶಮುಖ್ ಅವರು ಅಕ್ರಮವಾಗಿ ಗಳಿಸಲಾದ ಹಣವನ್ನು ಸುಮಾರು 11 ಕಂಪನಿಗಳಿಗೆ ವರ್ಗಾವಣೆ ಮಾಡಿದ್ದಾರೆ. ಈ 11 ಕಂಪನಿಗಳಲ್ಲಿ ಅನಿಲ್ ದೇಶಮುಖ್ ಅಥವಾ ಅವರ ಕುಟುಂಬದ ಯಾವುದಾದರೂ ಒಬ್ಬ ವ್ಯಕ್ತಿ ಕಂಪನಿಯ ನಿರ್ದೇಶಕರೋ ಅಥವಾ ಮುಖ್ಯಸ್ಥರೋ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಬಾರ್ ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ವಿವಿಧ ಮೂಲಗಳಿಂದ ಗಳಿಸಲಾದ ಸುಮಾರು 4.70 ಕೋಟಿ ಲಂಚದ ಹಣವನ್ನು ಅನಿಲ್ ದೇಶಮುಖ್ ತನ್ನ ಕಂಪನಿಗಳಿಗೆ ಹವಾಲಾ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದು, ಹೃಷಿಕೇಶ್ ದೇಶಮುಖ್ ಈ ರೀತಿಯಾಗಿ ಮಾಡಲು ಸೂಚನೆ ನೀಡಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ನವೆಂಬರ್ 15ರಂದು ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೇಶಮುಖ್ ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿ ಮಾಜಿ ಸಚಿವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯ ಆರೋಪಿಯ ಹೆಚ್ಚಿನ ವಿಚಾರಣೆಯ ಅಗತ್ಯ ಇಲ್ಲ ಎಂದು ಹೇಳಿದ ಹಿನ್ನೆಲೆಯಲ್ಲಿ ದೇಶಮುಖ್ ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ನವೆಂಬರ್ 1 ರಂದು ತಡರಾತ್ರಿ ದೇಶಮುಖ್ ಅವರನ್ನು ಇಡಿ ಬಂಧಿಸಿತ್ತು.
ದೇಶಮುಖ್ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೂಲಕ ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.ಮುಂಬೈನ ಹೋಟೆಲ್ಗಳು ಮತ್ತು ಬಾರ್ಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಅವರಿಗೆ ಅನಿಲ್ ದೇಶಮುಖ್ ನಿರ್ದೇಶನ ನೀಡಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ ನಂತರ ಸಿಬಿಐ ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಾಝ್ ಅವರನ್ನು ನವೆಂಬರ್ 13ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅನಿಲ್ ದೇಶಮುಖ್ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆದರೆ ಸಿಬಿಐ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ ನಂತರ ಏಪ್ರಿಲ್ನಲ್ಲಿ ತಮ್ಮ ಗೃಹ ಸಚಿವ ಸ್ಥಾನಕ್ಕೆ ಅನಿವಾರ್ಯವಾಗಿ ರಾಜೀನಾಮೆ ನೀಡಬೇಕಾಯಿತು.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ತಮ್ಮ ವಕೀಲರೊಂದಿಗೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ನವೆಂಬರ್ 1ರಂದು ಬೆಳಿಗ್ಗೆ ಹಾಜರಾಗಿದ್ದರು. ಇದಕ್ಕೂ ಮೊದಲು, ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಕಳೆದ ವಾರ ಮುಂಬೈ ಹೈಕೋರ್ಟ್ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ನಂತರ ಅವರು ಇಡಿ ಮುಂದೆ ಹಾಜರಾಗಿದ್ದರು.












Click it and Unblock the Notifications