ಕೊರೊನಾ ಹೆಚ್ಚಳ: ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್ಡೌನ್, ಸಿಎಂ ಏನಂತಾರೆ?
ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವ ಕುರಿತು ಏ.14ರ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆ, ಬೆಡ್ ಗಳ ಸಂಖ್ಯೆ ಹೆಚ್ಚಳ ಮಾಡುವುದು, ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದು, ರೆಮ್ಡಿಸಿವಿರ್ ಚುಚ್ಚು ಮದ್ದುಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವುದು ಸೇರಿದಂತೆ ಕೋವಿಡ್-19 ತಡೆಗೆ ಅಗತ್ಯವಿರುವ ಕ್ರಮಗಳ ಬಗ್ಗೆ ಈಗಾಗಲೇ ಸಿಎಂ ಉದ್ಧವ್ ಠಾಕ್ರೆ ಕೋವಿಡ್-19 ಟಾಸ್ಕ್ ಫೋರ್ಸ್ ನೊಂದಿಗೆ, ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಲಾಕ್ ಡೌನ್ ಘೋಷಣೆ, ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ) ತಯಾರಿಸಿ, ಏ.14 ರ ನಂತರ ಅಧಿಕೃತ ಘೋಷಣೆ ಮಾಡಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಇದೇ ವೇಳೆ ಮಹಾರಾಷ್ಟ್ರಕ್ಕೆ ಕೋವಿಡ್-19 ಲಸಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಕಳಿಸಿಕೊಡಬೇಕೆಂದು ಪ್ರಧಾನಿಗಳಿಗೆ ಮನವಿ ಮತ್ತೊಮ್ಮೆ ಮಾಡುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಸರಣ ನಿಯಂತ್ರಣಕ್ಕೆ ಸಿಗದೇ ಆತಂಕ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಾಕ್ ಡೌನ್ ಜಾರಿಗೆ ಬರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಎರಡನೇ ಅಲೆ ಮೇಲಿಂದ ಮೇಲೆ ಪೆಟ್ಟು ಕೊಡುತ್ತಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 63,294 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 34,008 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 349 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ. ಈವರೆಗೂ 27,82,161 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,987 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,65,587 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications