ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ತನಿಖೆಗೆ ಸಮಿತಿ ರಚನೆ
ಮುಂಬೈ, ಮಾರ್ಚ್ 30: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಬಳಸಿಕೊಂಡು ಹಣ ಸಂಗ್ರಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.
ಪ್ರತಿ ತಿಂಗಳು 100 ಕೋಟಿ ರೂ ಹಫ್ತಾ ಸಂಗ್ರಹಿಸುವಂತೆ, ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಅನಿಲ್ ದೇಶಮುಖ್ ಸೂಚಿಸಿದ್ದರು ಎಂದು ಐಪಿಎಸ್ ಅಧಿಕಾರಿ ಪರಮ್ ವೀರ್ ಸಿಂಗ್ ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಜೊತೆಗೆ ವಿರೋಧ ಪಕ್ಷಗಳು ಅನಿಲ್ ದೇಶಮುಖ್ ಅವರ ರಾಜೀನಾಮೆಗೂ ಒತ್ತಾಯಿಸಿದ್ದವು.
ಶಿವಸೇನೆ ಸರಕಾರದ ಬುಡವನ್ನೇ ಅಲುಗಾಡಿಸುತ್ತಿರುವ '100 ಕೋಟಿ ಹಫ್ತಾ'
ಈ ಪ್ರಕರಣದ ಸಂಬಂಧ ದೇಶಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಪರಮ್ ವೀರ್ ಸಿಂಗ್ ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಈ ಹಿಂದೆ ಎಂಟು ಪುಟಗಳ ಸುದೀರ್ಘ ಪತ್ರ ಬರೆದಿದ್ದ ಪರಮ್ಬೀರ್ ಸಿಂಗ್, 40-50 ಕೋಟಿ ರೂ ಮೊತ್ತವನ್ನು ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ಸೇರಿದಂತೆ ಪ್ರತಿ ತಿಂಗಳೂ 100 ಕೋಟಿ ರೂ. ಹಣ ಸಂಗ್ರಹಿಸುವಂತೆ ಸಚಿನ್ ವಾಜೆಗೆ ಅನಿಲ್ ದೇಶಮುಖ್ ಸೂಚಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪಗಳನ್ನು ನಿರಾಕರಿಸಿದ್ದ ದೇಶಮುಖ್, ಪರಮ್ಬೀರ್ ಸಿಂಗ್ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು.
ಇದೀಗ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಬಾಂಬೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಕೈಲಾಸ್ ಚಂದ್ ಚಂಡಿವಾಲ್ ಅವರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಆರು ತಿಂಗಳಿನಲ್ಲಿ ಸಮಿತಿಯು ವರದಿ ನೀಡಲಿದೆ.