ಮಹಾರಾಷ್ಟ್ರದಲ್ಲಿ ಮಾಡಿದ್ದುಣ್ಣೋ ಮಹಾರಾಯ: ಕೈಗೆ ಬಂದ ತುತ್ತು ಬಾಯಿಗಿಲ್ಲ
ಮುಂಬೈ, ನವೆಂಬರ್.28: ಉದ್ಧವ್ ಠಾಕ್ರೆ ಪಟ್ಟಾಭಿಷೇಕಕ್ಕೆ ಇಡೀ ಮಹಾರಾಷ್ಟ್ರವೇ ಎದುರು ನೋಡುತ್ತಿದೆ. ಶಿವಸೇನೆ ಪಾಳಯದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಮುಂಬೈನ ಶಿವಾಜಿ ಪಾರ್ಕ್ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಈಗಾಗಲೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದಂತೆ ಗಣ್ಯಾತಿಗಣ್ಯರಿಗೆ ಆಹ್ವಾನವನ್ನೂ ನೀಡಲಾಗಿದೆ. ಇದರ ಮಧ್ಯೆ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ.
ಶಿವಾಜಿ ಪಾರ್ಕ್: ಶಿವಸೇನಾ-ಮರಾಠಿಗರ ಹೆಮ್ಮೆಯ ತಾಣದ ಸುತ್ತಾ ಮುತ್ತಾ
ಬಿಜೆಪಿ ಜೊತೆ ಸರ್ಕಾರ ರಚಿಸಲು ಮುಂದಾಗಿದ್ದ ಅಜಿತ್ ಪವಾರ್ ಗೆ ಇದೀಗ ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ಆಗಿದೆ. ಈ ಮೊದಲು ಶಿವಸೇನೆ-ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಸರ್ಕಾರದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿ ಎಂದು ತೀರ್ಮಾನಿಸಲಾಗಿತ್ತು. ಆದರೆ, ಈಗ ಅದೆಲ್ಲ ಉಲ್ಟಾ ಹೊಡೆಯುವ ಲಕ್ಷಣಗಳು ಎದ್ದು ಕಾಣುತ್ತಿವೆ.
ಇಂದು ಅಜಿತ್ ಪವಾರ್ ಗಿಲ್ಲ ಪಟ್ಟ!
ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ ಶಿವಸೇನೆ-ಕಾಂಗ್ರೆಸ್-ಎನ್ ಸಿಪಿ ಪಕ್ಷಗಳ ತಲಾ 6 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವುದಿಲ್ಲ.
ಈ ಮೊದಲು ಬಿಜೆಪಿ ಕಡೆ ಮುಖ ಮಾಡಿದ್ದ ಅಜಿತ್ ಪವಾರ್ ಈಗಾಗಲೇ ಎನ್ ಸಿಪಿಗೆ ವಾಪಸ್ ಆಗಿದ್ದಾರೆ. ಹೀಗಿದ್ದರೂ ಇಂದಿನ ಕಾರ್ಯಕ್ರಮದಲ್ಲಿ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಪಟ್ಟ ಕಟ್ಟುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಸ್ವತಃ ಅಜಿತ್ ಪವಾರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.