ಮಹಾರಾಷ್ಟ್ರ ಬಂದ್: ಮುಂಬೈ ಸೇರಿ ಇತರೆ ನಗರಗಳಿಗೆ ಬಸ್ ಸಂಚಾರ ವ್ಯತ್ಯಯ
ಮುಂಬೈ, ಅಕ್ಟೋಬರ್ 11: ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್ ಮಾಡಲಾಗಿದ್ದು, ಮುಂಬೈ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಮುಂಬೈ ನಗರ ಪಾಲಿಕೆಯ ಬಸ್ಗಳು ಹಾಗೂ ಕಪ್ಪು ಹಳದಿ ಬಣ್ಣದ ಕ್ಯಾಬ್ಗಳು ರಸ್ತೆಯಿಂದ ದೂರ ಉಳಿದಿದ್ದವು. ಇದರಿಂದ ಸ್ಥಳೀಯ ರೈಲು ನಿಲ್ದಾಣಗಳಲ್ಲಿ ಭಾರಿ ಜನಸಂದಣಿ ಏರ್ಪಟ್ಟಿತ್ತು. ರೈಲು ಸೇವೆ ಯಥಾಸ್ಥಿತಿಯಲ್ಲಿತ್ತು.
ಲಖೀಂಪುರ್ ಖೇರಿಯಲ್ಲಿ ರೈತರ ಮೇಲಿನ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್ಗೆ ಕರೆ
ಬಂದ್ನಿಂದ ಮುಂಬೈ ಹಾಗೂ ಇತರೆ ಪ್ರದೇಶಗಳಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೆ ಬಹುತೇಕ ಅಂಗಡಿಗಳು ಹಾಗೂ ವಾಣಿಜ್ಯ ಮಳಿಗೆಗಳು ಕೂಡ ಬಾಗಿಲು ಮುಚ್ಚಿದ್ದವು.
ನಗರದಲ್ಲಿ ಮೆಟ್ರೋ ರೈಲು ಸೇವೆಗಳು ಕಾರ್ಯನಿರ್ವಹಿಸುತ್ತಿದ್ದವು. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಮುಂಬೈನಿಂದ ಇತರೆ ಸ್ಥಳಗಳಿಗೆ ಸಂಚರಿಸುತ್ತಿವೆ. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಂದ್ ಸಂದರ್ಭದಲ್ಲಿ ಕೆಲವೆಡೆ ಕಲ್ಲು ತೂರಾಟದಂತಹ ಘಟನೆಗಳು ವರದಿಯಾಗಿವೆ. ಇದರಿಂದ ಮುಂಬೈ ಮಹಾನಗರ ಪಾಲಿಕೆಯು ಬಸ್ ಸೇವೆಯನ್ನು ಸೋಮವಾರ ಸಂಪೂರ್ಣ ಸ್ಥಗಿತಗೊಳಿಸಿದೆ.
ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋಗಳನ್ನು ಶಿವಸೇನಾ ಕಾರ್ಯಕರ್ತರು ತಡೆದು ನಿಲ್ಲಿಸಿ ಬಂದ್ಗೆ ಬೆಂಬಲ ನೀಡುವಂತೆ ಸೂಚಿಸುತ್ತಿರುವುದಾಗಿ ವರದಿ ಹೇಳಿದೆ. ಕೆಲವೆಡೆ ಕಲ್ಲು ತೂರಾಟದಂತಹ ಘಟನೆಗಳು ನಡೆದಿವೆ. 9 ಬಸ್ಗಳು ಜಖಂಗೊಂಡಿವೆ.
ಥಾಣೆ ಜಿಲ್ಲೆಯಲ್ಲಿ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳು ಬೆಳಗ್ಗೆ ಮುಚ್ಚಿದ್ದವು. ಅನೇಕ ಸ್ಥಳಗಳಲ್ಲಿ ರಸ್ತೆಗಳು ಭಣಗುಡುತ್ತಿದ್ದವು. ಹಾಗೆಯೇ ಸಾರ್ವಜನಿಕ ಸಾರಿಗೆಗಳು ಕೂಡ ರಸ್ತೆಗಿಳಿದಿರಲಿಲ್ಲ.
ಅ. 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಇನ್ನೂ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ರೈತರಾಗಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಓಡಿಸುತ್ತಿದ್ದ ವಾಹನಗಳನ್ನು ರೈತರ ಮೇಲೆ ಹರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
Recommended Video
ಅಲ್ಲದೆ, ಆ ಎರಡು ಕಾರುಗಳಲ್ಲಿ ಒಂದು ಕಾರನ್ನು ಓಡಿಸುತ್ತಿದ್ದುದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂದು ಎಫ್ಐಆರ್ ದಾಖಲಿಸಲಾಗಿತ್ತು.