ಮಹಾರಾಷ್ಟ್ರ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ
ಮುಂಬೈ, ಆಗಸ್ಟ್.26: ಮಹಾರಾಷ್ಟ್ರದಲ್ಲಿ ಸಂಭವಿಸಿದ 5 ಅಂತಸ್ತಿನ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 4 ವರ್ಷದ ಒಂದು ಮಗು ಸೇರಿದಂತೆ ಏಳು ಪುರುಷರು ಮತ್ತು ಎಂಟು ಮಹಿಳೆಯರು ದುರಂತದಲ್ಲಿ ಮೃತಪಟ್ಟಿದ್ದಾರೆ.
ರಾಯಘಡ್ ಜಿಲ್ಲೆ ಮಹದ್ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದಿದ್ದು, 36 ಗಂಟೆಗಳ ನಂತರವೂ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತಿದೆ. ಕಟ್ಟಡದ ಅವಶೇಷಗಳಡಿ ಒಬ್ಬ ವ್ಯಕ್ತಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 3 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಹಾರಾಷ್ಟ್ರ ಕಟ್ಟಡ ಕುಸಿತದಲ್ಲಿ ಇಬ್ಬರು ಸಾವು; ಐವರ ವಿರುದ್ಧ ಪ್ರಕರಣ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಜಿಲ್ಲಾಡಳಿತದ ಅಧಿಕಾರಿಗಳ ಜೊತೆಗೆ ಕಟ್ಟಡ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸುವುದಾಗಿ ಸಿಎಂ ಘೋಷಿಸಿದ್ದಾರೆ.
ಐವರು ಆರೋಪಿಗಳ ವಿರುದ್ಧ ಪ್ರಕರಣ:
ರಾಯಘಡ್ ಜಿಲ್ಲೆಯ ಮಹದ್ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ದುರಂತಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 304, 304ಎ, 337, 338, ಮತ್ತು 34ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಕಾರಣದ ಕುರಿತು ತನಿಖೆ ನಡೆಸುವುದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಬೇಕಿದೆ ಎಂದು ಅದಿಥಿ ತತ್ಕಾರೆ ತಿಳಿಸಿದ್ದಾರೆ. ಈ ಕಟ್ಟಡವನ್ನು ನಿರ್ಮಿಸಿ ಐದಾರು ವರ್ಷಗಳೇ ಕಳೆದಿದ್ದು, ಐದು ಅಂತಸ್ತಿನ ಕಟ್ಟಡದಲ್ಲಿ 40 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.