ಸಿಎಎ-ಎನ್ ಆರ್ ಸಿ ವಿಚಾರದಲ್ಲಿ ಮಹಾರಾಷ್ಚ್ರ ಜನತೆಗೆ ಮುಖ್ಯಮಂತ್ರಿ ಅಭಯ
ಮುಂಬೈ, ಫೆಬ್ರವರಿ.18: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕುರಿತು ಯಾರೊಬ್ಬರೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯದ ಜನರಿಗೆ ಅಭಯ ನೀಡಿದ್ದಾರೆ.
ಸಿಂಧ್ ದುರ್ಗದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಸಿಎಎ ಮತ್ತು ಎನ್ ಆರ್ ಸಿ ಜಾರಿಗೊಳಿಸುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುತ್ತದೆ ಎಂಬ ಆತಂಕ ಯಾರಿಗೂ ಬೇಡ. ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿ ಆರ್)ಗೂ ರಾಷ್ಟ್ರೀಯ ನಾಗರಿಕ ನೋಂದಣಿಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ಅರ್ಜಿಯಲ್ಲಿ ಇರುವ ಪ್ರತಿ ಕಾಲಂನ್ನು ಗಮನಿಸಿದ್ದು, ಈ ನೋಂದಣಿಯಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಸಿಎಎ ಮತ್ತು ಎನ್ ಆರ್ ಸಿಗಳೇ ಬೇರೆ, ಎನ್ ಪಿ ಆರ್ ವಿಚಾರವೇ ಬೇರೆಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಮಹಾರಾಷ್ಟ್ರದಲ್ಲಿ ಜಾರಿಗೊಳಿಸುವುದಕ್ಕೆ ಸಾಧ್ಯವಿಲ್ಲ. ಎನ್ ಆರ್ ಸಿ ಬಗ್ಗೆ ಕೇಂದ್ರ ಸರ್ಕಾರವು ಇದುವರೆಗೂ ಯಾರೊಂದಿಗೂ ಚರ್ಚೆ ನಡೆಸಿಲ್ಲ. ಇನ್ನು, ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಿಂದ ರಾಜ್ಯದ ಜನರಿಗೆ ಯಾವುದೇ ಅಪಾಯವಿಲ್ಲ ಎಂದು ಸಿಎಂ ಉದ್ದವ್ ಠಾಕ್ರೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟಾಗಿ ಸರ್ಕಾರ ರಚಿಸಿರುವ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಸಿಎಎ ಮತ್ತು ಎನ್ ಆರ್ ಸಿ ವಿಚಾರದಲ್ಲಿ ಭಿನ್ನ ನಿಲುವುವನ್ನು ಪ್ರದರ್ಶಸುತ್ತಿದ್ದಾರೆ. ಲೋಕಸಭೆಯಲ್ಲಿ ಸಿಎಎಗೆ ಶಿವಸೇನೆ ಬೆಂಬಲಿಸಿದರೆ, ರಾಜ್ಯಸಭೆಯಲ್ಲಿ ಮತದಾನದ ವೇಳೆ ಶಿವಸೇನೆ ಸದಸ್ಯರು ಸಭಾತ್ಯಾಗ ಮಾಡಿದ್ದರು.












Click it and Unblock the Notifications