"ಪ್ಲೀಸ್.. 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಕೊಡಿ"
ಮುಂಬೈ, ಏಪ್ರಿಲ್ 05: ಮಹಾರಾಷ್ಟ್ರದಲ್ಲಿ ಮಕ್ಕಳು, ಯುವಕರಲ್ಲೇ ಅತಿಹೆಚ್ಚು ಕೊರೊನಾವೈರಸ್ ಸೋಂಕು ಕಾಣಿಸಿಕೊಳ್ಳುತ್ತಿರುವುದು ಹೊಸ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆ ಹೆಚ್ಚುವರಿ ಲಸಿಕೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿಕೊಂಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಚರ್ಚೆಯಲ್ಲಿ ಕೊವಿಡ್-19 ಸೋಂಕಿನಿಂದ ಎದುರಾದ ಭೀತಿ ಬಗ್ಗೆ ಪ್ರಧಾನಿಯವರಿಗೆ ಸಿಎಂ ಉದ್ಧವ್ ಠಾಕ್ರೆ ವಿವರಿಸಿದರು. ರಾಜ್ಯದಲ್ಲಿ 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾವೈರಸ್ ಲಸಿಕೆ ನೀಡುವುದಕ್ಕೆ ಅನುಮತಿ ನೀಡಬೇಕು. ಇದರ ಜೊತೆಗೆ ಆರು ಜಿಲ್ಲೆಗಳಿಗೆ ಹೆಚ್ಚುವರಿಯಾಗಿ 1.5 ಕೋಟಿ ಕೊವಿಡ್-19 ಲಸಿಕೆಯನ್ನು ನೀಡಬೇಕು ಎಂದು ಸಿಎಂ ಉದ್ಧವ್ ಠಾಕ್ರೆ ಮನವಿ ಸಲ್ಲಿಸಿದರು.
ಪ್ರತಿನಿತ್ಯ ಹೊರಗಡೆ ಸಂಚರಿಸುವ ಯುವಕರಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. 25 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ ನೀಡುವುದರ ಮೂಲಕ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಸಬಹುದು ಎಂದು ಸಿಎಂ ಉದ್ಧವ್ ಠಾಕ್ರೆ ಸಲಹೆ ನೀಡಿದ್ದಾರೆ.

3 ತಿಂಗಳಿನಲ್ಲಿ 88,000ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ:
ಮಹಾರಾಷ್ಟ್ರದಲ್ಲಿ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಮೂರು ತಿಂಗಳಿನಲ್ಲಿ 88,827 ಮಕ್ಕಳಲ್ಲಿ ಕೊವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. 40 ವರ್ಷದೊಳಗಿನ ಸೋಂಕಿತರ ಸಂಖ್ಯೆಯಲ್ಲಿ ಶೇ.48ರಷ್ಟು ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 47288 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ 155 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 26,252 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಟ್ಟು 30,57,885 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,49,075 ಸೋಂಕಿತರು ಗುಣಮುಖರಾಗಿದ್ದು, 56,033 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,51,375 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.












Click it and Unblock the Notifications