ಕೊರೊನಾವೈರಸ್ ಬಗ್ಗೆ ಮಹಾರಾಷ್ಟ್ರ ಜನರನ್ನು ಎಚ್ಚರಿಸಿದ ಕೇಂದ್ರ ಸರ್ಕಾರ
ಮುಂಬೈ, ಮಾರ್ಚ್ 19: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಭಾರತ ಸೇರಿದಂತೆ ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಈ ಹಂತದಲ್ಲೇ ಕೊವಿಡ್-19 ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಎಚ್ಚರಿಸಿದೆ.
ಕಳೆದೊಂದು ವಾರದಲ್ಲಿ ಕೊರೊನಾವೈರಸ್ ಸೋಂಕಿನ ಏರಿಕೆಗೆ ಮಹಾರಾಷ್ಟ್ರ ನಲುಗಿ ಹೋಗಿದೆ. ಪ್ರಸ್ತುತ ಸಂದರ್ಭದಲ್ಲಿ ಇದೇ ರೀತಿ ಸೋಂಕಿನ ಹರಡುವಿಕೆ ಮುಂದುವರಿದರೆ ಏಪ್ರಿಲ್ ಮೊದಲ ವಾರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷ ತಲುಪಲಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 25833 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 12,174 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 58 ಮಂದಿ ಪ್ರಾಣ ಬಿಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಏರಿಕೆ:
ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 23,96,340ಕ್ಕೆ ಏರಿಕೆಯಾಗಿದೆ. ಈ ಪೈಕಿ 21,75,565 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ ಮಹಾಮಾರಿಗೆ 53138 ಜನರು ಪ್ರಾಣ ಬಿಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 1,66,353 ಸಕ್ರಿಯ ಪ್ರಕರಣಗಳಿದ್ದು, ಏಪ್ರಿಲ್ ಮೊದಲ ವಾರದ ವೇಳೆಯಲ್ಲಿ ಈ ಪ್ರಕರಣಗಳ ಸಂಖ್ಯೆಯು 3 ಲಕ್ಷಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.












Click it and Unblock the Notifications