ಅಕ್ರಮ ಹಣ ವರ್ಗಾವಣೆ: ED ಎದುರು ಹಾಜರಾದ ಮಾಜಿ ಸಚಿವ ಅನಿಲ್ ದೇಶ್ಮುಖ್
ಮುಂಬೈ, ನವೆಂಬರ್ 01: ಅಕ್ರಮ ಹಣ ವರ್ಗಾವಣೆಗೆ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಸೋಮವಾರ ಜಾರಿ ನಿರ್ದೇಶನಾಲಯದ(ಇ.ಡಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನಾಲ್ಕು ನೋಟಿಸ್ಗಳಿಗೆ ಅನಿಲ್ ದೇಶಮುಖ್ ಪ್ರತಿಕ್ರಿಯಿಸಿರಲಿಲ್ಲ. ನಂತರ, ಮಾಜಿ ಸಚಿವರು ವಿಚಾರಣಾ ನೋಟಿಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಕಳೆದ ವಾರ ನಿರಾಕರಿಸಿದ ನಂತರ, ಈಗ ಇ.ಡಿ. ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾಜಿ ಸಚಿವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಅನಿಲ್ ದೇಶಮುಖ್ ವಿರುದ್ಧ ದಾಖಲಾಗಿರುವ ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಒಳಗೊಂಡ ಹಣ ದಂಧೆ ಪ್ರಕರಣ ಸಂಬಂಧ ಸಿಬಿಐ ಮೊದಲ ಬಂಧನ ಮಾಡಿದ್ದು, ಆಪಾದಿತ ಮಧ್ಯವರ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಥಾಣೆಯಿಂದ ಸಂತೋಷ್ ಜಗತಾಪ್ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ತಿಂಗಳು ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾದ ನಂತರವೂ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಮಧ್ಯವರ್ತಿ ಎಂದು ಆರೋಪಿಸಲಾದ ಜಗತಾಪ್ ಮನೆ ಮೇಲೆ ದಾಳಿ ನಡೆಸಿ 9 ಲಕ್ಷ ರೂಪಾಯಿ ವಶಪಡಿಸಿಕೊಂಡಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಐದು ಬಾರಿ ಸಮನ್ಸ್ ಕಳಿಸಲಾಗಿತ್ತು. ಅನಿಲ್ ಅವರ ಇಬ್ಬರು ಆಪ್ತರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೊಳಪಡಿಸಿತ್ತು.
ಆದರೆ, ಅನಿಲ್ ಅವರು ಸಮನ್ಸ್ಗೆ ಉತ್ತರಿಸಿರಲಿಲ್ಲ, ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ, ದೇಶಬಿಟ್ಟು ತೆರಳದಂತೆ ತಡೆಯಲು ಲುಕ್ಔಟ್ ನೋಟಿಸ್ ಹೊರಡಿಸಲಾಗಿದೆ. ಇದಾದ ಬಳಿಕ ಸಮನ್ಸ್ ರದ್ದು ಕೋರಿ ಮನವಿ ಸಲ್ಲಿಸಿದ್ದರು.
ಸಮನ್ಸ್ಗೆ ಉತ್ತರಿಸುವ ಅಗತ್ಯವಿಲ್ಲ, ಕಾನೂನು ಮೂಲಕ ಪರಿಹರಿಸಿಕೊಳ್ಳಲಾಗುವುದು ಎಂದಿದ್ದ ಅನಿಲ್ ಅವರಿಗೆ ಸುಪ್ರೀಂಕೋರ್ಟ್ ನಿಂದಲೂ ಮಧ್ಯಂತರ ಪರಿಹಾರ ಸಿಕ್ಕಿರಲಿಲ್ಲ.
ಜತೆಗೆ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಾಲಂದ್, ಸಹಾಯಕ ಕುಂದನ್ ಶಿಂಧೆ ಬಂಧಿಸಿ ಅವರ ವಿರುದ್ಧ ಚಾರ್ಜ್ ಶೀಟ್ ಹಾಕಿರುವುದು ಹಿನ್ನಡೆಯಾಗಿದೆ. ಅನಿಲ್ ಅವರ ಪರ ವಕೀಲ ಅನಂದ್ ದಾಗಾ ಅವರನ್ನು ಸಿಬಿಐ ಬಂಧಿಸಿದೆ. ಏಪ್ರಿಲ್ 21ಕ್ಕೆ ಎಫ್ಐಆರ್ ಹಾಕಿದೆ. ಇದರ ಜೊತೆಗೆ ಜಾರಿ ನಿರ್ದೇಶನಾಲಯವು ತನಿಖೆ ಮುಂದುವರೆಸಿದೆ.
ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು.
ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಯಶ್ರೀ ಪಾಟೀಲ್ ಎಂಬುವವರ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ ನ್ಯಾಯಾಲಯ, ಪರಮ್ ಬೀರ್ ಸಿಂಗ್, ವಕೀಲರಾದ ಘನಶ್ಯಾಮ್ ಉಪಾಧ್ಯಾಯ್ ಮತ್ತು ಮೋಹನ್ ಭಿಡೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.












Click it and Unblock the Notifications