ಮಹಾರಾಷ್ಟ್ರ: ಅನಿಲ್ ದೇಶ್ಮುಖ್ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
ಮುಂಬೈ, ಏಪ್ರಿಲ್ 05: ಮಹಾರಾಷ್ಟ್ರದಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪ ಎದರಾದ ಹಿನ್ನೆಲೆ ಗೃಹ ಸಚಿವ ಅನಿಲ್ ದೇಶ್ಮುಖ್ ಸಲ್ಲಿಸಿದ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದರ ಜೊತೆಗೆ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಗೃಹ ಇಲಾಖೆಯ ಉಸ್ತುವಾರಿ ನೀಡುವುದು. ಕಾರ್ಮಿಕ ಇಲಾಖೆಯನ್ನು ಹಸನ್ ಮುಶ್ರಿಫ್, ರಾಜ್ಯ ಅಬಕಾರಿ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಅಜಿತ್ ಪವಾರ್ ಅವರಿಗೆ ನೀಡುವ ಸಿಎಂ ಉದ್ಧವ್ ಠಾಕ್ರೆ ಶಿಫಾರಸ್ಸನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಅನಿಲ್ ದೇಶ್ಮುಖ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ದಿಲೀಪ್ ವಾಲ್ಸೆ ಪಾಟೀಲ್ ನೇಮಕ?
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ 15 ದಿನಗಳ ಒಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿತ್ತು.
ಪ್ರತಿ ತಿಂಗಳು 100 ಕೋಟಿ ವಸೂಲಿಗೆ ಸೂಚನೆ:
ಮಹಾರಾಷ್ಟ್ರದಲ್ಲಿ ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಅನಿಲ್ ದೇಶ್ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜಯಶ್ರೀ ಪಾಟೀಲ್ ಎಂಬುವವರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪರಮ್ ಬೀರ್ ಸಿಂಗ್, ವಕೀಲರಾದ ಘನಶ್ಯಾಮ್ ಉಪಾಧ್ಯಾಯ್ ಮತ್ತು ಮೋಹನ್ ಭಿಡೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು.