ಮಹಾರಾಷ್ಟ್ರದಲ್ಲಿ ಕೊರೊನಾದಿಂದ ಆಸ್ಪತ್ರೆ ಸೇರಿದ ರಾಜ್ಯಪಾಲ ಭಗತ್ ಸಿಂಗ್ ಕಶ್ಯಪ್
ಮುಂಬೈ, ಜೂನ್ 21: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವುದರ ಮಧ್ಯೆ ರಾಜ್ಯಪಾಲ ಭಗತ್ ಸಿಂಗ್ ಕಶ್ಯಪ್ ಕೊರೊನಾ ವೈರಸ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ರಾಜ್ಯಪಾಲರಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತು. ಈ ಹಿನ್ನೆಲೆ 80 ವರ್ಷದ ಭಗತ್ ಸಿಂಗ್ ಕಶ್ಯಪ್ ಅನ್ನು ದಕ್ಷಿಣ ಮುಂಬೈನಲ್ಲಿ ಇರುವ ರಿಲಾಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸದಾ ಮಾಸ್ಕ್ ಧರಿಸಿಕೊಂಡು ಹಾಜರಾಗುತ್ತಿದ್ದ ಭಗತ್ ಸಿಂಗ್ ಕಶ್ಯಪ್ ಕೋವಿಡ್ ಸೋಂಕಿನ ಬಗ್ಗೆ ಅತಿಹೆಚ್ಚು ಜಾಗೃತಿ ವಹಿಸಿದ್ದರು. ಅದಾಗ್ಯೂ, ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಾತ್ರಿ ಆಯಿತು.

ಮಹಾರಾಷ್ಟ್ರದಲ್ಲಿ ಕೋವಿಡ್-19 ಅಪಾಯ: ಕಳೆದ ಮಂಗಳವಾರ ಮಹಾರಾಷ್ಟ್ರದಲ್ಲಿ 3,659 ಮಂದಿಗೆ ಕೋವಿಡ್ -19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿತ್ತು. ಈ ಪೈಕಿ ಮುಂಬೈನಲ್ಲೇ 1,781 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಒಂದು ಸಾವಿನ ಪ್ರಕರಣ ಪತ್ತೆಯಾಗಿತ್ತು. ರಾಜ್ಯದಲ್ಲಿ ಇದುವರೆಗೂ ಒಟ್ಟು 79,41,762 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಪ್ರಕರಣಗಳ ಸಂಖ್ಯೆ 1,47,889ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಅಂಕಿ-ಸಂಖ್ಯೆ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,812 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,334,657ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 42,715,193 ಸೋಂಕಿತರು ಗುಣಮುಖರಾಗಿದ್ದು, 524,890 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 94,574ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications