ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವಂತೆ ಬಿಜೆಪಿಗೆ ರಾಜ್ಯಪಾಲರ ಬುಲಾವ್
ಮುಂಬೈ, ನವೆಂಬರ್.09: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಗೊಂದಲಕ್ಕೆ ರಾಜ್ಯಪಾಲರೇ ತೆರೆ ಎಳೆದಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕ ದೊಡ್ಡಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೌಶಿಯರ್ ಆಹ್ವಾನ ನೀಡಿದ್ದಾರೆ.
ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಮಹಾರಾಷ್ಟ್ರದ 228 ಕ್ಷೇತ್ರಗಳ ಪೈಕಿ 105 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ರೆ, 56 ಸ್ಥಾನಗಳಲ್ಲಿ ಶಿವಸೇನೆ ದಿಗ್ವಿಜಯ ಸಾಧಿಸಿತ್ತು.
ಮಹಾರಾಷ್ಟ್ರ: ಮುಖ್ಯಮಂತ್ರಿ ಸ್ಥಾನಕ್ಕೆ ಫಡ್ನವೀಸ್ ರಾಜೀನಾಮೆ
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮೊದಲು ಮೈತ್ರಿ ಮಾಡಿಕೊಂಡಿದ್ದ ಉಭಯ ಪಕ್ಷಗಳು, ಫಲಿತಾಂಶ ಹೊರ ಬೀಳುತ್ತಿದ್ದಂತೆ ಗದ್ದುಗೆ ಹಿಡಿಯಲು ಗುದ್ದಾಡುತ್ತಿವೆ. ಮೈತ್ರಿ ಮೂಲಕ ಸರ್ಕಾರ ರಚನೆ ಮಾಡುವ ಬದಲು ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಡುತ್ತಿವೆ. ಸದ್ಯದ ರಾಜಕೀಯ ಗೊಂದಲಗಳಿಂದ ರೋಸಿ ಹೋದ ಮುಖ್ಯಮಂತ್ರಿ ದೇವಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ನಿನ್ನೆಯಷ್ಟೇ ಈಗಾಗಲೇ ರಾಜೀನಾಮೆ ನೀಡಿದ್ದರು.
ಬಹುಮತವಿಲ್ಲದೇ ಕುದುರೆ ವ್ಯಾಪಾರದ ಆರೋಪ:
ಬಿಜೆಪಿ 50-50 ಅನುಸಾರವಾಗಿ ಸಚಿವ ಸಂಪುಟ ಹಂಚಿಕೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಹಿಡಿದು ಕುಳಿತಿದ್ದರು. ಮುಖ್ಯಮಂತ್ರಿ ಸ್ಥಾನ ಹಂಚಿಕೆ ಆಗದೇ ಮೈತ್ರಿ ಮಾಡಿಕೊಳ್ಳುವ ಮಾತೇ ಇಲ್ಲ ಎಂದಿದ್ದರು. ಅಲ್ಲದೇ ಮತದಾನ ಪೂರ್ವದಲ್ಲಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ತಪ್ಪು ಮಾಡಿದೆವು ಎಂಬ ರಾಗ ಹಾಡುತ್ತಿದ್ದರು. ಅಧಿಕಾರಕ್ಕಾಗಿ ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂಬ ಆರೋಪವನ್ನು ಕೂಡಾ ಶಿವಸೇನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶಿವಸೇನೆಯ ಶಾಸಕರನ್ನು ರಾಜಸ್ಥಾನದ ರೆಸಾರ್ಟ್ ಗೆ ಕಳುಹಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳಿಂದ ನೊಂದು ಮುಖ್ಯಮಂತ್ರಿ ದೇವಂದ್ರ ಫಡ್ನವೀಸ್ ನಿನ್ನೆ ರಾಜ್ಯಪಾಲ ಬಿ.ಎಸ್.ಕೋಶಿಯಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಗಡುವು ಮುಗಿದರೂ ಸರಿಯೇ, ಮಹಾರಾಷ್ಟ್ರಕ್ಕೆ ದೇವೇಂದ್ರ ಫಡ್ನವಿಸ್ ಸಿಎಂ!
ಶಿವಸೇನೆ ವಿರುದ್ಧ ಕೆಂಡ ಕಾರಿದ ದೇವೇಂದ್ರ ಫಡ್ನವೀಸ್:
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ನಂತರ ಮಾತನಾಡಿದ ದೇವೇಂದ್ರ ಫಡ್ನವೀಸ್, ಶಿವಸೇನೆ ಆರೋಪವನ್ನು ತಳ್ಳಿ ಹಾಕಿದ್ದರು. ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲು ಬಿಜೆಪಿ ಸಿದ್ಧವಿಲ್ಲ. ಅದರಂತೆ ಅಧಿಕಾರಕ್ಕಾಗಿ ಶಿವಸೇನೆ ಆರೋಪಿಸುತ್ತಿರುವಂತೆ ಕುದುರೆ ವ್ಯಾಪಾರವನ್ನೂ ಮಾಡುತ್ತಿಲ್ಲ. ಒಂದು ವೇಳೆ ಆರೋಪ ನೀಡುವುದೇ ಆದರೆ, ಶಿವಸೇನೆ ಅದಕ್ಕೆ ಸಾಕ್ಷ್ಯಗಳನ್ನು ನೀಡಲಿ ಅಂತಾ ಫಡ್ನವೀಸ್ ಕಿಡಿ ಕಾರಿದ್ದರು.