ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತದ ಪ್ರಶ್ನೆಯೇ ಇಲ್ಲ: ಸಂಜಯ್ ರಾವತ್
ಮುಂಬೈ, ಮೇ 26: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತದ ಪ್ರಶ್ನೆಯೇ ಇಲ್ಲ ಎಂದು ಶಿವಸೇನೆ ವಕ್ತಾರ ಹಾಗೂ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಉದ್ಧವ್ ಠಾಕ್ರೆ ಮತ್ತು ಪವಾರ್ ನಡುವೆ ಚರ್ಚೆಯಾಗಿದೆ. ಈ ವೇಳೆ ಯಾವುದೇ ರೀತಿಯ ರಾಷ್ಟ್ರಪತಿ ಆಡಳಿತ ಹೇರಿಕೆಯ ಮಾತುಗಳು ಕೇಳಿಬಂದಿಲ್ಲ.
ಮಹಾರಾಷ್ಟ್ರ ಹಾಟ್ ಸ್ಪಾಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಅಲ್ಲದೆ ಇಡೀ ರಾಷ್ಟ್ರ ಕೊರೋನಾ ಸಾಂಕ್ರಾಮಿಕದಿಂದ ಬಳಲುತ್ತಿರುವಾಗ ರಾಷ್ಟ್ರಪತಿ ಆಡಳಿತ ಹೇರಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೆ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗಡ್ಕರಿ ಅವರಿಂದಲೂ ಈ ಬಗ್ಗೆ ಮಾತುಗಳನ್ನು ಕೇಳಿಲ್ಲ. ಹೀಗಿರುವಾಗ ಯಾರು ಈ ರೀತಿಯ ಊಹಾಪೋಹಗಳನ್ನು ಹರಿಯ ಬಿಡುತ್ತಿದ್ದಾರೆ ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು.
ಬಿಜೆಪಿ ಮಿತ್ರಪಕ್ಷವಾಗಿದ್ದೂ ಕಾಂಗ್ರೆಸ್ ಮೈತ್ರಿ ಪಕ್ಷವಾದ ಎನ್ ಸಿಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿರುವ ಶಿವಸೇನೆ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಶ್ನೆಯೇ ಇಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು ಸರ್ಕಾರ ಅವಧಿ ಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭೇಟಿಯಾಗಿದ್ದರು. ಇಬ್ಬರೂ ನಾಯಕರೂ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದರು.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ರಾಜ್ಯಸಭೆ ಬಿಜೆಪಿ ಸಂಸದ ನಾರಾಯಣ್ ರಾಣೆ ಸೋಮವಾರ ಮಹಾರಾಷ್ಟ್ರ ರಾಜ್ಯಪಾಲ ಬಿಎಸ್ ಕೋಶಿಯಾರಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬೇಕೆಂದು ಮನವಿ ಮಾಡಿದ್ದರು.
ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬ ಅಂಶಗಳನ್ನು ಪರಿಗಣಿಸಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.