ಮಹಾರಾಷ್ಟ್ರದಲ್ಲಿ ಕಾರ್ಮಿಕರಿಗೆ ಸರ್ಕಾರದಿಂದ 1500 ರೂ. ಸಹಾಯಧನ
ಮುಂಬೈ, ಏಪ್ರಿಲ್ 28: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಮಹಾರಾಷ್ಟ್ರದಲ್ಲಿ ನೋಂದಣಿ ಮಾಡಿಕೊಂಡ 9.17 ಲಕ್ಷ ಮಂದಿ ಕಟ್ಟಡ ಕಾರ್ಮಿಕರ ಖಾತೆಗೆ ತಲಾ 1500 ರೂಪಾಯಿ ಸಹಾಯ ಧನವನ್ನು ಸರ್ಕಾರದಿಂದ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಹಸನ್ ಮುಷ್ರಫ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 13 ಲಕ್ಷ ನೋಂದಣಿ ಮಾಡಿಕೊಂಡಿರುವ ಕಾರ್ಮಿಕರು ಇದ್ದಾರೆ. ಈ ಪೈಕಿ ಕಳೆದ ನಾಲ್ಕು ದಿನಗಳಲ್ಲಿ 9.17 ಲಕ್ಷ ಕಾರ್ಮಿಕರಿಗಾಗಿ 137.61 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾರ್ಮಿಕರಿಗೆ ನರೆವು ನೀಡುವ ಉದ್ದೇಶದಿಂದಾಗಿ ಕಟ್ಟಡ ಕಾರ್ಮಿಕರು ಮತ್ತು ಇತರ ಕಾರ್ಮಿಕರ ಕಲ್ಯಾಣ ಮಂಡಳಿಯು ಈ ನಿರ್ಧಾರ ತೆಗೆದುಕೊಂಡಿದೆ. ಕಳೆದ ವರ್ಷ ನೋಂದಾಯಿತ ಕಾರ್ಮಿಕರಿಗೆ ಸರ್ಕಾರದಿಂದ ತಲಾ 5000 ರೂಪಾಯಿ ಸಹಾಯಧನವನ್ನು ನೀಡಲಾಗಿತ್ತು.

ಕೊರೊನಾವೈರಸ್ ಸೋಂಕಿತ ಪ್ರಕರಣ:
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಉದ್ದೇಶದಿಂದ ಘೋಷಿಸಿರುವ ಕಟ್ಟುನಿಟ್ಟಿನ ನಿಯಮಗಳು ಮೇ 1ರವರೆಗೂ ಜಾರಿಯಲ್ಲಿ ಇರಲಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 66358 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 895 ಮಂದಿ ಪ್ರಾಣ ಬಿಟ್ಟಿದ್ದು, 67,752 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 44,100,85 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 36,69,548 ಸೋಂಕಿತರು ಗುಣಮುಖರಾಗಿದ್ದು, 6,72,434 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications