ನಮ್ಮನ್ನು ಕೇಳದೆ ಒಳಗೆ ಬರುವಂತಿಲ್ಲ: ಸಿಬಿಐಗೆ ಮಹಾರಾಷ್ಟ್ರ ತಾಕೀತು!
ಮುಂಬೈ, ಅಕ್ಟೋಬರ್ 22: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ನಕಲಿ ಟಿಆರ್ಪಿ ಹಗರಣಗಳ ತನಿಖೆಯಲ್ಲಿ ಸಿಬಿಐ ಮಧ್ಯಪ್ರವೇಶದ ಬಳಿಕ ರಾಜ್ಯದಲ್ಲಿ ಸಿಬಿಐ ಪ್ರವೇಶದ ಮೇಲೆ ಮಹಾರಾಷ್ಟ್ರ ನಿರ್ಬಂಧ ವಿಧಿಸಿದೆ.
ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐ ಅಧಿಕಾರಿಗಳು ಸರ್ಕಾರದ ಅನುಮತಿ ಇಲ್ಲದೆ ಪ್ರವೇಶಿಸಬಹುದೆಂಬ ಸಾಮಾನ್ಯ ಒಪ್ಪಿಗೆಯನ್ನು ಮಹಾರಾಷ್ಟ್ರದ ಶಿವಸೇನಾ ನೇತೃತ್ವದ ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ. ಹೀಗಾಗಿ ಇನ್ನು ಮುಂದೆ ಸಿಬಿಐ ಯಾವುದೇ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಪ್ರವೇಶಿಸುವ ಮುನ್ನ ಅಲ್ಲಿನ ಸರ್ಕಾರದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಲಿದೆ.
ನಕಲಿ ಟಿಆರ್ಪಿ ಹಗರಣ: ಕೇಸ್ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರು ನಡೆಸಿದ ತನಿಖೆ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೆ ಸುಪ್ರೀಂಕೋರ್ಟ್ ಮಧ್ಯಪ್ರವೇಶದ ಬಳಿಕ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. ಈಗ ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸೇರಿದಂತೆ ಮೂರು ಚಾನೆಲ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿಯೂ ದೂರು ದಾಖಲಾಗಿದ್ದು, ಯೋಗಿ ಆದಿತ್ಯನಾಥ್ ಸರ್ಕಾರ ಅದರ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಅದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.
ಸುಶಾಂತ್ ಪ್ರಕರಣದಲ್ಲಿ ಬಿಹಾರದಲ್ಲಿ ದಾಖಲಾದ ಪ್ರಕರಣದ ತನಿಖೆಗೆ ಮಹಾರಾಷ್ಟ್ರಕ್ಕೆ ಸಿಬಿಐ ಅಧಿಕಾರಿಗಳು ಬರುವಂತೆ, ಟಿಆರ್ಪಿ ಪ್ರಕರಣದಲ್ಲಿಯೂ ನಡೆಯುವ ಸಾಧ್ಯತೆ ಇದೆ ಎಂಬುದನ್ನು ಗ್ರಹಿಸಿರುವ ಶಿವಸೇನಾ ಸರ್ಕಾರ, ಇದರಲ್ಲಿ ಸಿಬಿಐ ಹಸ್ತಕ್ಷೇಪ ಮಾಡದಂತೆ ತಡೆಯಲು ಈ ನಿರ್ಧಾರ ತೆಗೆದುಕೊಂಡಿದೆ.
ಸುಶಾಂತ್ ಸಿಂಗ್ ಪ್ರಕರಣ: ತನಿಖೆ ಮುಕ್ತಾಯಕ್ಕೆ ಸಿಬಿಐ ತೀರ್ಮಾನ
ಮಹಾರಾಷ್ಟ್ರದಲ್ಲಿ ತಾನು ದಾಖಲಿಸುವ ಪ್ರತಿ ಪ್ರಕರಣದ ತನಿಖೆಗೂ ಸಿಬಿಐ ಮಹಾರಾಷ್ಟ್ರ ಸರ್ಕಾರದ ಅನುಮತಿ ಪಡೆಯಬೇಕಾಗಲಿದೆ. 1946ರ ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ನ ಸೆಕ್ಷನ್ 6ರ ಅಡಿ ಮಹಾರಾಷ್ಟ್ರ ಸರ್ಕಾರ ತನ್ನ ಅಧಿಕಾರವನ್ನು ಚಲಾಯಿಸಿದ್ದು, ಅದರ ಅನ್ವಯ ಸರ್ಕಾರದ ಒಪ್ಪಿಗೆ ಇಲ್ಲದೆ ಮಹಾರಾಷ್ಟ್ರದಲ್ಲಿ ತನಿಖೆ ನಡೆಸುವ ಅನುಮತಿಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ.