ಮಹಾರಾಷ್ಟ್ರದಲ್ಲಿ ಕೊರೊನಾ ಹರಡಲು ವಲಸಿಗರೇ ಕಾರಣ: ರಾಜ್ ಠಾಕ್ರೆ
ಮುಂಬೈ, ಏಪ್ರಿಲ್ 06: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಹೆಚ್ಚಾಗುವುದಕ್ಕೆ ವಲಸಿಗರೇ ಮೂಲ ಕಾರಣ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕು ಹರಡುತ್ತಿರುವುದಕ್ಕೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರೇ ನೇರ ಹೊಣೆವಾಗಿ ಆಗಿದ್ದಾರೆ ಎಂದು ರಾಜ್ ಠಾಕ್ರೆ ದೂಷಿಸಿದ್ದಾರೆ. ಕೊವಿಡ್-19 ಸೋಂಕು ತಪಾಸಣೆ ವ್ಯವಸ್ಥೆಯೂ ಇಲ್ಲದಂತಾ ರಾಜ್ಯಗಳಿಂದ ಸಾಕಷ್ಟು ಪ್ರಮಾಣದಲ್ಲಿ ವಲಸೆ ಕಾರ್ಮಿಕರು ಮಹಾರಾಷ್ಟ್ರಕ್ಕೆ ವಲಸೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.
"ಪ್ಲೀಸ್.. 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಕೊಡಿ"
ದೇಶದಲ್ಲೇ ಅತಿಹೆಚ್ಚು ಕೈಗಾರಿಕೆಗಳನ್ನು ಹೊಂದಿರುವ ಮಹಾರಾಷ್ಟ್ರಕ್ಕೆ ಹಲವು ರಾಜ್ಯಗಳಿಂದ ಕಾರ್ಮಿಕರು ವಲಸೆ ಬರುತ್ತಾರೆ. ಆಯಾ ರಾಜ್ಯಗಳಲ್ಲಿ ಕೊವಿಡ್-19 ಸೋಂಕು ತಪಾಸಣೆ ಮಾಡಿಸಿಕೊಳ್ಳದೇ ಇಲ್ಲಿಗೆ ವಾಪಸ್ಸಾಗುತ್ತಿದ್ದಾರೆ. ಈ ಹಿಂದೆ ಲಾಕ್ ಡೌನ್ ಜಾರಿಗೊಳಿಸಿದಾಗಲೂ ನಾನು ಕೆಲವು ಸಲಹೆಗಳನ್ನು ನೀಡಿದ್ದೆನು. ತಮ್ಮ ರಾಜ್ಯಗಳಿಗೆ ವಾಪಸ್ಸಾದ ಕಾರ್ಮಿಕರು ಕಡ್ಡಾಯವಾಗಿ ಕೊರೊನಾವೈರಸ್ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರೂ, ಆ ನಿಯಮ ಸರಿಯಾದ ರೀತಿಯಲ್ಲಿ ಪಾಲನೆ ಆಗಲಿಲ್ಲ ಎಂದು ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಕೊರೊನಾವೈರಸ್ ಕಂಡೀಷನ್:
ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 55469 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 297 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 34,256 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟ್ರದಲ್ಲಿ ಒಟ್ಟು 31,13,354 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,83,331 ಸೋಂಕಿತರು ಗುಣಮುಖರಾಗಿದ್ದು, 56,330 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,72,283 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.