ಪಾಕ್-ಬಾಂಗ್ಲಾ ನುಸುಳುಕೋರರ ಬಗ್ಗೆ ಮಾಹಿತಿ ನೀಡಿದರೆ 5 ಸಾವಿರ ಬಹುಮಾನ
ಮುಂಬೈ, ಫೆಬ್ರವರಿ.27: ಪಾಕಿಸ್ತಾನ್ ಮತ್ತು ಬಾಂಗ್ಲಾದೇಶದ ನುಸುಳುಕೋರರ ಬಗ್ಗೆ ಮಾಹಿತಿ ನೀಡಿದವರಿಗೆ 5 ಸಾವಿರ ರೂಪಾಯಿ ಬಹುಮಾನದ ಜೊತೆಗೆ ಸನ್ಮಾನ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ ಘೋಷಿಸಿದೆ.
ಮಹಾರಾಷ್ಟ್ರದ ಔರಂಗಾಬಾದ್ ನ ಸಂಭಾಜಿ ನಗರದಲ್ಲಿ ಈ ಬಗ್ಗೆ ಬ್ಯಾನರ್ ಒಂದನ್ನು ಹಾಕಲಾಗಿದೆ. ಭಾರತಕ್ಕೆ ನೆರೆ ರಾಷ್ಟ್ರಗಳಿಂದ ಜನರು ಅಕ್ರಮವಾಗಿ ನುಸುಳಿರುವ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ನುಸುಳಿದವರ ಬಗ್ಗೆ ಮಾಹಿತಿ ನೀಡಿದರೆ 5 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಮಹಾರಾಷ್ಟ್ರಕ್ಕೆ ನುಸುಳಿ ಬಂದಿರುವವರನ್ನು ಇಲ್ಲಿಂದ ಹೊರ ಹಾಕುವುದಕ್ಕಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ಬೃಹತ್ ಮೆರವಣಿಗೆಯನ್ನು ಆಯೋಸಿದೆ ಎಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಜ್ ಠಾಕ್ರೆ ಬೆಂಬಲ:
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ನೀತಿಗೆ ಬೆಂಬಲ ವ್ಯಕ್ತಪಡಿಸಿದ್ದು, ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತದೆ.
ಮಹಾರಾಷ್ಟ್ರದ ಮುಂಬೈ ಮತ್ತು ಪುಣೆ ನಗರದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮೂಲದ ಜನರು ಒಳನುಸುಳಿ ಬಂದಿದ್ದಾರೆ. ಅಂಥವರನ್ನು ಮಹಾರಾಷ್ಟ್ರದಿಂದ ಹೊರ ಹಾಕಬೇಕಿದೆ. ಅಕ್ರಮ ನುಸುಳುಕೋರರ ಬಗ್ಗೆ ಮಾಹಿತಿ ನೀಡಿದವರಿಗೆ 5 ಸಾವಿರ ರೂಪಾಯಿ ಬಹುಮಾನದ ಜೊತೆಗೆ ಸನ್ಮಾನ ಮಾಡಲಾಗುತ್ತದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.












Click it and Unblock the Notifications