ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶ್ಮುಖ್ ಬಂಧನ
ಮುಂಬೈ, ನವೆಂಬರ್ 02: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ರನ್ನು ಸತತ 12 ಗಂಟೆಗಳಿಗಿಂತ ಅಧಿಕ ಗಂಟೆಗಳ ಕಾಲ ಮುಂಬೈನ ತನ್ನ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಜಾರಿ ನಿರ್ದೇಶನಾಲಯವು (ಇ.ಡಿ) ಬಂಧನ ಮಾಡಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪ ಕೇಳಿ ಬಂದಿತ್ತು. ಏಪ್ರಿಲ್ 21ರಂದು ಸಿಬಿಐ ತಂಡದಿಂದ ಎನ್ಸಿಪಿ ನಾಯಕ ಅನಿಲ್ ದೇಶ್ ಮುಖ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಧಿಕಾರ ದುರುಪಯೋಗ, ಭ್ರಷ್ಟಾಚಾರದ ಆರೋಪವನ್ನು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದಾರೆ. ಈ ಆರೋಪದ ಆಧಾರದಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಸಿಬಿಐ ದೋಷಾರೋಪಣ ಪಟ್ಟಿ ತಯಾರಿ ಮಾಡುತ್ತಿದೆ.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ಅನಿಲ್ ದೇಶ್ಮುಖ್ಗೆ ಸುಮಾರು ಐದು ಬಾರಿ ಸಮನ್ಸ್ ಕಳುಹಿಸಿತ್ತು. ಆದರೆ ಅನಿಲ್ ದೇಶ್ಮುಖ್ ಹಾಜರಾಗಿರಲಿಲ್ಲ. ಹಾಗೆಯೇ ಸಮನ್ಸ್ಗೆ ಯಾವುದೇ ಉತ್ತರವನ್ನೂ ನೀಡಿರಲಿಲ್ಲ. ಈ ಹಿನ್ನೆಲೆ ಬಳಿಕ ಲುಕ್ಔಟ್ ನೋಟಿಸ್ ಹೊರಡಿಸಲಾಗಿದೆ.

ಲುಕ್ಔಟ್ ನೋಟಿಸ್ ಬಳಿಕ ಅನಿಲ್ ದೇಶ್ಮುಖ್ ತನ್ನ ವಿರುದ್ಧದ ಸಮನ್ಸ್ ರದ್ದು ಮಾಡುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಾಂಬೆ ಹೈಕೋರ್ಟ್ ಕಳೆದ ವಾರ ಅನಿಲ್ ದೇಶ್ಮುಖ್ರ ಅರ್ಜಿಯನ್ನು ವಜಾ ಮಾಡಿದೆ. ಹಾಗೆಯೇ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಮುಂದುವರಿಸುವಂತೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಈ ಬೆನ್ನಲ್ಲೆ ಅನಿಲ್ ದೇಶ್ಮುಖ್ ತನ್ನ ವಿರುದ್ಧ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ ನೀಡಿರುವುದನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪ ಮಾಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಪತ್ರ ಬರೆದಿದ್ದರು. ಈ ಪತ್ರದಲ್ಲಿ ಅನಿಲ್ ದೇಶ್ಮುಖ್ 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದರು.
ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಪರಮ್ ಬೀರ್ ಸಿಂಗ್
ಇದಕ್ಕೂ ಮುನ್ನ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪದಲ್ಲಿ ವಾಹನದಲ್ಲಿ ಸ್ಪೋಟಕ ಪತ್ತೆಯಾದ ಪ್ರಕರಣದಲ್ಲಿ ಸೂಕ್ತ ರೀತಿಯಲ್ಲಿ ನಿಭಾವಣೆ ಮಾಡಿರಲಿಲ್ಲ ಎಂಬ ಕಾರಣದಿಂದಾಗಿ ಮಹಾರಾಷ್ಟ್ರ ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದರು. ಆ ಬಳಿಕ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಈ ಪತ್ರವನ್ನು ಬರೆದಿದ್ದಾರೆ. ಮುಂಬೈನ ಹುಕ್ಕಾ ಪಾರ್ಲರ್ಗಳ ಕುರಿತಾಗಿ ಸಭೆ ನಡೆಸಿದ್ದ ಸಂದರ್ಭದಲ್ಲಿ ಸಭೆಯ ಬಳಿಕ ಗೃಹ ಸಚಿವರ ವೈಯಕ್ತಿಕ ಕಾರ್ಯದರ್ಶಿ ಪಲಾಂಡೆ, "ಗೃಹ ಗೃಹಸಚಿವರು ಮುಂಬೈನಲ್ಲಿರುವ ಅಂದಾಜು 1750 ಬಾರ್, ರೆಸ್ಟೋರೆಂಟ್ಗಳು ಮತ್ತಿತರ ವ್ಯಾಪಾರಿಗಳಿಂದ ಸುಮಾರು 40ರಿಂದ 50 ಕೋಟಿ ರೂಪಾಯಿ ಸಂಗ್ರಹದ ಗುರಿಹೊಂದಿದ್ದಾರೆ," ಎಂದು ತಿಳಿಸಿರುವುದಾಗಿ ಈ ಪತ್ರದಲ್ಲಿ ಆರೋಪ ಮಾಡಲಾಗಿದೆ. ಈ ಆರೋಪವನ್ನು ಮಾಜಿ ಸಚಿವ ಅನಿಲ್ ದೇಶ್ಮುಖ್ ನಿರಾಕರಿಸಿದ್ದಾರೆ.
ಇನ್ನು ತನ್ನ ವಿರುದ್ಧ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಅನಿಲ್ ದೇಶ್ಮುಖ್ ಎಲ್ಲಾ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಹಾಗೆಯೇ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ದ ವಾಗ್ದಾಳಿಯನ್ನು ನಡೆಸಿದ್ದಾರೆ. "ನನ್ನ ವಿರುದ್ಧ ಆರೋಪವನ್ನು ಮಾಡಿದ ಪರಮ್ ಬೀರ್ ಸಿಂಗ್ ಈಗ ಎಲ್ಲಿದ್ದಾರೆ?. ಈಗಾಗಲೇ ಪರಮ್ ಬೀರ್ ಸಿಂಗ್ ಇಲಾಖೆಯ ಅಧಿಕಾರಿಗಳು ಹಾಗೂ ಹಲವಾರು ಉದ್ಯಮಿಗಳು ಪರಮ್ ಬೀರ್ ಸಿಂಗ್ ವಿರುದ್ಧ ದೂರು ದಾಖಲು ಮಾಡಿದ್ದಾರೆ," ಎಂದು ತಿಳಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)












Click it and Unblock the Notifications