ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ, ಅರ್ನಬ್ ವಿರುದ್ಧ ಎಫ್ಐಆರ್
ಮುಂಬೈ, ಮೇ 4: ರಿಪಬ್ಲಿಕ್ ಟಿವಿ ಸುದ್ದಿ ವಾಹಿನಿಯ ಮುಖ್ಯಸ್ಥ, ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತರುವಂಥ ಕಾರ್ಯಕ್ರಮ ಪ್ರಸಾರ ಮಾಡಿದ ಆರೋಪ ಕೇಳಿ ಬಂದಿದೆ. ಮುಂಬೈ ಪೊಲೀಸರು ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಿದ್ದಾರೆ.
ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ವಾಹಿನಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರು ಸಿಬ್ಬಂದಿ ವಿರುದ್ಧ ಪೈಧೋನಿ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ರಾಜಾ ಎಜುಕೇಷನ್ ವೆಲ್ಫೇರ್ ಸೊಸೈಟಿಯ ಕಾರ್ಯದರ್ಶಿ ಇರ್ಫಾನ್ ಅಬುಬಾಕರ್ ಶೇಖ್ ಎಂಬುವರು ದೂರು ನೀಡಿದ್ದಾರೆ. ದೂರು ಸ್ವೀಕರಿಸಿ, ಎಫ್ಐಅರ್ ಹಾಕಲಾಗಿದೆ.
ಅರ್ನಬ್ ವಿರುದ್ಧದ ಎಫ್ಐಆರ್ಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ವಿಸ್ತರಿಸಿದ ನಂತರ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಾಂದ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಈ ಘಟನೆಗೂ ಬಾಂದ್ರಾದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಅರ್ನಬ್ ಅವರು ಬಾಂದ್ರಾ ಮಸೀದಿಯ ಚಿತ್ರ ತೋರಿಸಿ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಮುಸ್ಲಿಂ ಸಮುದಾಯದಿಂದಲೇ ಕೊರೊನಾ ಸೋಂಕು ಹೆಚ್ಚಾಗಿ ಹಬ್ಬುತ್ತಿದೆ ಎಂದು ಸಾಧಿಸಲು ಅರ್ನಬ್ ಹೊರಟಿರುವ ಹಾಗಿದೆ, ನೇರವಾಗಿ ಸಮುದಾಯವನ್ನು ದೂಷಿಸುತ್ತಾ, ಸಾಮರಸ್ಯ ಕದಡುವ ಕೆಲಸವನ್ನು ಮಾಡಿದ್ದಾರೆ ಎಂದು ದೂರಲಾಗಿದೆ. ದೂರಿನ ಅನ್ವಯ ಐಪಿಸಿ ಸೆಕ್ಷನ್ 153, 153ಎ, 295ಎ, 500, 505, 505 (2), 511 ಹಾಗೂ 120 ಬಿ ಅನ್ವಯ ಎಫ್ಐಆರ್ ಹಾಕಲಾಗಿದೆ.