ಫಡ್ನವಿಸ್ ಹಾಗೂ ಅಜಿತ್ ಪವಾರ್ಗೆ ಶುಭಾಶಯ ಕೋರಿದ ಮೋದಿ
ನವದೆಹಲಿ, ನವೆಂಬರ್ 23: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿ ಹಾಗೂ ಭವಿಷ್ಯದ ಕುರಿತು ಒಳ್ಳೆಯ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ. ಶ್ರಮಿಸಲಿದ್ದಾರೆ ಎನ್ನುವ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಭವನ, ಮಹಾರಾಷ್ಟ್ರದ ರಾಜಭವನ ನಡುವೆ ನಡೆದಿದ್ದೇನು?
ಎನ್ಸಿಪಿ, ಕಾಂಗ್ರೆಸ್ ಹಾಗೂ ಶಿವಸೇನಾ ಸೇರಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿತ್ತು. ಅದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ ಕೊನೆಯ ಹಂತದಲ್ಲಿ ನಡೆದ ಬೆಳವಣಿಗೆಯಲ್ಲಿ ಬಿಜೆಪಿ ಹಾಗೂ ಎನ್ಸಿಪಿ ಸೇರಿ ಸರ್ಕಾರ ರಚನೆ ಮಾಡಿದೆ. ಇದು ಕಾಂಗ್ರೆಸ್ ಹಾಗೂ ಶಿವಸೇನೆಗೆ ಬಹುದೊಡ್ಡ ಆಘಾತವೇ ಆಗಿದೆ.
ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ 105 ಸೀಟುಗಳನ್ನು ಗೆದ್ದಿತ್ತು. ಚುನಾವಣೆ ಸಂದರ್ಭದಲ್ಲಿ ಬೆಂಬಲ ನೀಡಿದ್ದ ಶಿವಸೇನೆ, ಫಲಿತಾಂಶದ ಬಳಿಕ ಉಲ್ಟಾ ಹೊಡೆದಿತ್ತು.
ಶಿವಸೇನೆಯು ಉದ್ಧವ್ ಠಾಕ್ರೆಯನ್ನೇ ಮುಖ್ಯಮಂತ್ರಿ ಮಾಡಬೇಕೆಂದು 50:50 ಸರ್ಕಾರ ರಚನೆ ಮಾಡಬೇಕು ಎಂದು ಪಟ್ಟು ಹಿಡಿದಿತ್ತು. ಹೀಗಾಗಿ ಫಲಿತಾಂಶ ಹೊರಬಿದ್ದು ತಿಂಗಳುಗಳೇ ಕಳೆದರೂ ಗೊಂದಲದಿಂದ ಹೊರಬರಲಾರದೆ ಸರ್ಕಾರ ರಚನೆಯಲ್ಲಿ ವಿಳಂಭವಾಗಿತ್ತು. ಆದರೆ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.