Breaking; ನವನೀತ್ ಕೌರ್ ದಂಪತಿಗಳ ಅರ್ಜಿ ವಜಾಗೊಳಿಸಿದ ಕೋರ್ಟ್
ಮುಂಬೈ, ಏಪ್ರಿಲ್ 25; ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಕೋರಿದ್ದ ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ಹನುಮಾನ್ ಚಾಲೀಸಾ ಪಠಣ ವಿವಾದದ ಹಿನ್ನಲೆಯಲ್ಲಿ ಪೊಲೀಸರು ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್ ಬಂಧಿಸಿದ್ದರು. ದಂಪತಿಗಳನ್ನು ನ್ಯಾಯಾಲಯ ಅವರನ್ನು 14 ದಿನಗಳ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸೋಮವಾರ ದಂಪತಿಗಳು ಪೊಲೀಸರು ತಮ್ಮ ವಿರುದ್ಧ ದಾಖಲು ಮಾಡಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ದಂಪತಿಗಳು ಜೈಲಿನಲ್ಲಿಯೇ ಇರಬೇಕಿದೆ.
ಶುಕ್ರವಾರ ನವನೀತ್ ಕೌರ್ ದಂಪತಿಗಳು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ನಿವಾಸದ ಹೊರಗೆ ಹುನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿದ್ದರು. ಇದರಿಂದಾಗಿ ಪೊಲೀಸರು ದಂಪತಿಗಳಿಗೆ ನೋಟಿಸ್ ನೀಡಿದ್ದರು. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಬಾರದು ಎಂದು ಸೂಚನೆ ನೀಡಿದ್ದರು.
ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದ ದಂಪತಿಗಳು ಹನುಮಾನ್ ಚಾಲೀಸಾ ಪಠಿಸುವ ತೀರ್ಮಾನದಿಂದ ಹಿಂದೆ ಸರಿದಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಶಿವಸೇನೆ ಕಾರ್ಯಕರ್ತರು ಸಂಸದೆ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು.
ಶನಿವಾರ ರಾತ್ರಿ ಪೊಲೀಸರು ದಂಪತಿಗಳನ್ನು ಬಂಧಿಸಿದ್ದರು. ದಂಪತಿಗಳ ವಿರುದ್ಧ ಐಪಿಸಿ ಸೆಕ್ಷನ್ 153 (ಎ), ಮುಂಬೈ ಪೊಲೀಸ್ ಕಾಯ್ದೆಯ ಸೆಕ್ಷನ್ 135ರ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ದಂಪತಿಗಳು ಕೋರ್ಟ್ ಮೊರೆ ಹೋಗಿದ್ದರು.
ಸಂಸದೆ ನವನೀತ್ ಕೌರ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿನೇಳು ಶಿವಸೇನೆ ಕಾರ್ಯಕರ್ತರನ್ನು ಭಾನುವಾರ ಬಂಧಿಸಲಾಗಿತ್ತು. ಸೋಮವಾರ ಕೋರ್ಟ್ ಎಲ್ಲರಿಗೂ ಜಾಮೀನು ಮಂಜೂರು ಮಾಡಿದೆ.












Click it and Unblock the Notifications