ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ ಅನಾರೋಗ್ಯ, ಬುಧವಾರ ಶಸ್ತ್ರ ಚಿಕಿತ್ಸೆ
ಮುಂಬೈ, ಮಾರ್ಚ್ 29: ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಆರೋಗ್ಯ ಹದಗೆಟ್ಟಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಅವರ ಪಿತ್ತಕೋಶದಲ್ಲಿ ಸಮಸ್ಯೆ ಉಂಟಾಗಿದ್ದು, ಅದಕ್ಕಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ.
ಭಾನುವಾರ ಸಂಜೆಯಿಂದ ಶರದ್ ಪವಾರ್ ಅವರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅವರ ಪಿತ್ತಕೋಶದಲ್ಲಿ ಕಲ್ಲುಗಳು ಇರುವುದನ್ನು ವೈದ್ಯರು ಪತ್ತೆಹಚ್ಚಿದ್ದಾರೆ. ಹೀಗಾಗಿ ಇಂದಿನಿಂದ ಮುಂದಿನ ಪ್ರಕಟನೆಯವರೆಗೂ ಅವರ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಲಾಗಿದೆ ಎಂದು ಎನ್ಸಿಪಿ ವಕ್ತಾರ ನವಾಬ್ ಮಲಿಕ್ ತಿಳಿಸಿದ್ದಾರೆ.
ಭ್ರಷ್ಟಾಚಾರ ಆರೋಪ: ಅನಿಲ್ ದೇಶಮುಖ್ ಬೆಂಬಲಕ್ಕೆ ನಿಂತ ಶರದ್ ಪವಾರ್
'ಅವರು ರಕ್ತವನ್ನು ತೆಳುಗೊಳಿಸುವ ಔಷಧೋಪಚಾರದಲ್ಲಿದ್ದರು. ಆದರೆ ಈ ಹೊಸ ಸಮಸ್ಯೆಯಿಂದ ಅದನ್ನು ಸ್ಥಗಿತಗೊಳಿಸಲಾಗಿದೆ. ಅವರನ್ನು 2021ರ ಮಾರ್ಚ್ 31ರಂದು ಆಸ್ಪತ್ರೆಗೆ ದಾಖಲಿಸಲಾಗುವುದು. ಎಂಡೋಸ್ಕೋಪ ಮತ್ತು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಹೀಗಾಗಿ ಅವರ ಮುಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.
Recommended Video
80 ವರ್ಷದ ಶರದ್ ಪವಾರ್ ಅವರು ಕ್ಯಾನ್ಸರ್ಅನ್ನು ಜಯಿಸಿ ಬಂದವರಾಗಿದ್ದು, 2004ರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಭಾನುವಾರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.