ಮಹಾರಾಷ್ಟ್ರದಲ್ಲಿ ಪಕ್ಷ ಹಾಗೂ ಶಾಸಕ ಸ್ಥಾನ ತೊರೆದ ಎನ್ಸಿಪಿ ಶಾಸಕ
ಮುಂಬೈ, ಡಿಸೆಂಬರ್ 31: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಭಿನ್ನಮತ ಸ್ಫೋಟಗೊಂಡಿದೆ. ಎನ್ಸಿಪಿಯ ಹಿರಿಯ ಮುಖಂಡ ಹಾಗೂ ಶಾಸಕ ಪ್ರಕಾಶ್ ಸೋಲಂಕಿ ಎನ್ಸಿಪಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸೋಮವಾರ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಅವಕಾಶ ದೊರೆಯದ ಹಿನ್ನೆಲೆಯಲ್ಲಿ ಮಜಲ್ಗಾವ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎನ್ಸಿಪಿ ಶಾಸಕ ಪ್ರಕಾಶ್ ರಾಜೀನಾಮೆ ನೀಡಿದ್ದಾರೆ.
ಎನ್ಸಿಪಿ ಕೋಟಾದಲ್ಲಿ ಸಂಪುಟ ದರ್ಜೆಯ ಸ್ಥಾನಮಾನವನ್ನು ಸೋಲಂಕಿ ನಿರೀಕ್ಷಿಸಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಪವಾರ್ ನಿರಾಕರಿಸಿದ್ದರು ಎನ್ನಲಾಗಿದೆ.
ಈ ಸಂಬಂಧ ಮಾತನಾಡಿರುವ ಸೋಲಂಕಿ ಸಚಿವ ಸಂಪುಟಕ್ಕೂ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ ಆದರೆ ನಾನು ರಾಜಕೀಯಕ್ಕೆ ಅಯೋಗ್ಯ ಹೀಗಾಗಿ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ರಾಜಕೀಯ ಪಕ್ಷ ಹಾಗೂ ಚುನಾವಣೆಯಿಂದ ದೂರ ಸರಿಯಲು ನಿರ್ಧರಿಸಲಾಗಿದೆ ಎಂದು ಪ್ರಕಾಶ್ ತಿಳಿಸಿದ್ದಾರೆ.
ಸೋಮವಾರ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಚ್ಚರಿಯ ಬೆಳವಣಿಗೆ ಕಡೆದಿತ್ತು. ಬಿಜೆಪಿ ಜೊತೆಗೆ ಸರ್ಕಾರ ರಚಿಸಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಅಜಿತ್ ಪವಾರ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ , ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸೇರಿ 36 ಜನರು ಪ್ರಮಾಣವಚ ಸ್ವೀಕರಿಸಿದ್ದರು.
ಸಂಪುಟ ವಿಸ್ತರಣೆಗೆ ಸಂಬಂಧಿಸಿ ಪ್ರಕಾಶ ಸೋಲಂಕಿಯಲ್ಲದೆ ಶಿವಸೇನೆಯ ವಕ್ತಾರ ಸಂಜಯ್ ರಾವತ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪೃಥ್ವಿರಾಜ್ ಚೌಹಾಣ್ ಕೂಡ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.