ಥಾಣೆಯ ಕಾರ್ಖಾನೆಯಿಂದ ವಿಷಕಾರಿ ಅನಿಲ ಸೋರಿಕೆ: 34ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಮುಂಬೈ, ಅಕ್ಟೋಬರ್ 12: ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದ ರಾಸಾಯನಿಕ ಕೈಗಾರಿಕಾ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ 34 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ವಿಷಕಾರಿ ಅನಿಲ ಸೋರಿಕೆಯಾದ ಬಳಿಕ ರಾಸಾಯನಿಕ ಕಾರ್ಖಾನೆಯ ಬಳಿ ವಾಸಿಸುವ ಹಲವಾರು ಜನರು ಉಸಿರಾಟದ ತೊಂದರೆ, ಕಣ್ಣುಗಳಲ್ಲಿ ಕಿರಿಕಿರಿ, ವಾಕರಿಕೆ ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ವಿವರಣೆ ನೀಡಿದ ಥಾಣೆ ಮುನ್ಸಿಪಲ್ ಕಾರ್ಪೊರೇಶನ್ ಪ್ರಾದೇಶಿಕ ವಿಪತ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ಸಂತೋಷ್ ಕದಮ್ ಅವರು ಅಂಬರನಾಥದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಎಂಐಡಿಸಿ) ಇರುವ ಘಟಕದಲ್ಲಿ ಸಲ್ಫ್ಯೂರಿಕ್ ಆಸಿಡ್ ಬೆಳಿಗ್ಗೆ 10 ಗಂಟೆಗೆ ಸೋರಿಕೆಯಾಗಿದೆ ಎಂದು ದೃಢಪಡಿಸಿದ್ದಾರೆ.
''ಉಸಿರಾಟದ ತೊಂದರೆ ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ 34 ಜನರನ್ನು ಉಲ್ಹಾಸ್ ನಗರದ ಕೇಂದ್ರ ಆಸ್ಪತ್ರೆಗೆ ಸಾಗಿಸಲಾಗಿದೆ. ಅಸ್ವಸ್ಥರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ಬಳಿಕ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಾಸಾಯನಿಕ ಸೋರಿಕೆಯ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಸಿದ್ದಾರೆ,'' ಎಂದು ಸಂತೋಷ್ ಕದಮ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಬದ್ಲಾಪುರದಲ್ಲಿನ ಪ್ರಕರಣ:
ಕಳೆದ ಕೆಲ ತಿಂಗಳ ಹಿಂದೆ(ಜನವರಿ 4) ಮಹಾರಾಷ್ಟ್ರದ ಬದ್ಲಾಪುರದಲ್ಲಿನ ನೊಬೆಲ್ ಇಂಟರ್ಮಿಡಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ರಾಸಾಯನಿಕ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಾಗಿ ಜನರು ಉಸಿರಾಟ ಹಾಗೂ ಕಣ್ಣು ಉರಿ ಸಮಸ್ಯೆಯನ್ನು ಎದುರಿಸಿದ್ದರು. ಮುನ್ನೆಚ್ಚೆರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಆಂಧ್ರಪ್ರದೇಶದ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ:
ಕಳೆದ ಕೆಲ ತಿಂಗಳ ಹಿಂದೆ ಆಂಧ್ರಪ್ರದೇಶ ವಿಶಾಖಪಟ್ಟಣಂನಲ್ಲಿ ಎಲ್ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಸ್ಟೈರೀನ್ ಅನಿಲ ಸೋರಿಕೆಯಾಗಿತ್ತು. ಇದರಿಂದಾಗಿ ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, 1,000ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದು ದೇಶವನ್ನೇ ಬೆಚ್ಚಿ ಬೀಳಿಸಿತ್ತು.












Click it and Unblock the Notifications