ಎನ್ಆರ್ಸಿ-ಸಿಎಎ ಪರ ಅಭಿಯಾನ ನಡೆಸಲಿರುವ ರಾಜ್ ಠಾಕ್ರೆ
ಮುಂಬೈ, ಜನವರಿ 24: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಕಾಂಗ್ರೆಸ್ನೊಂದಿಗೆ ಕೈ ಜೋಡಿಸಿದ್ದರೆ ಇತ್ತ ಸಹೋದರ ರಾಜ್ ಠಾಕ್ರೆ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ.
ಸಿಎಎ ಹಾಗೂ ಎನ್ಆರ್ಸಿಗೆ ಪರೋಕ್ಷ ಬೆಂಬಲ ಸೂಚಿಸಿರುವ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ರಾಜ್ಯಾದ್ಯಂತ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಅಭಿಯಾನವನ್ನು ನಡೆಸುವುದಾಗಿ ಘೋಷಿಸಿದ್ದಾರೆ.
ಸಿಎಎಗೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ಭಾರತದ ಗಡಿಯೊಳಗೆ ನುಗ್ಗಿ ದೇಶದ ಭದ್ರತೆ ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಅಕ್ರಮ ನುಸುಳುಕೋರರನ್ನು ಸಮರ್ಥಿಸಲು ಸಾಧ್ಯವಿಲ್ಲ. ಹೋರಾಟಗಳ ದಿಕ್ಕು ತಪ್ಪಿಸಲಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯು ಹೋರಾಟ ನಡೆಸಲಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದು, ರಾಮಮಂದಿರ ನಿರ್ಮಾಣ ಆದೇಶ, ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧಿಸಿ ಮುಸ್ಲಿಮರು ಆಕ್ರೋಶಗೊಂಡಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಇದು ಸಂಪೂರ್ಣ ಸತ್ಯವಲ್ಲ. ಎಲ್ಲಾ ಮುಸ್ಲಿಮರು ಆಕ್ರೋಶಗೊಂಡಿಲ್ಲ ಎಂದು ಠಾಕ್ರೆ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭೇಟಿಯಾಗಿ ಮಾತುಕತೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗ ಎಂಎನ್ಎಸ್ನಿಂದ ಈ ನಿರ್ಧಾರ ಹೊರಗೆ ಬಂದಿದೆ.