ಮರಾಠಿಗರ ರಕ್ಷಣೆಗೆ ರಾಜನಾಥ್ ಸಿಂಗ್ ಮಧ್ಯಪ್ರವೇಶಿಸಬೇಕು: ಶಿವಸೇನೆ
ಮುಂಬೈ, ನವೆಂಬರ್, 6: ಕರ್ನಾಟಕದಲ್ಲಿ ಮರಾಠಿ ಭಾಷಿಕರ ರಕ್ಷಣೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ರಾಜನಾಥ್ ಸಿಂಗ್ ಅವರು ಕೂಡಲೇ ಮಧ್ಯಪ್ರವೇಶಿಸಿ ಮರಾಠಿ ಭಾಷಿಕರಿಗೆ ರಕ್ಷಣೆ ಒದಗಿಸಬೇಕು ಎಂದು ಶಿವಸೇನೆ ಶಾಸಕಿ ನೀಲಮ್ ಗೋಹೆ ಹೇಳಿದ್ದಾರೆ.
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ವಿರೋಧಿಸಿ 'ಕರಾಳ ದಿನ' ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸದಸ್ಯರು ಮತ್ತು ನಾಯಕರನ್ನು ಬಂಧಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಮರಾಠಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ.
ಮರಾಠಿಗರ ಮೇಲೆ ಕರ್ನಾಟಕದಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಕೂಡಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾಹಿತಿ ಪಡೆದು ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಅವರು ಹೇಳಿದ್ದಾರೆ.
ಮರಾಠಿಗರ ರಕ್ಷಣೆಗಾಗಿ ಮತ್ತು ಮಹಾರಾಷ್ಟ್ರ ಏಕೀಕರಣ ವಿಚಾರದಲ್ಲಿ ಶಿವಸೇನೆ ಯಾವಾಗಲು ಮುಂದೆ ಹೋರಾಡುತ್ತದೆ ಎಂದು ಅವರು ಹೇಳಿದರು.
ಎಂಇಎಸ್ ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಮನಬಂದಂತೆ ಥಳಿಸಿದ್ದಾರೆ ಮತ್ತು ಚಿತ್ರಹಿಂಸೆ ನೀಡಿದ್ದಾರೆ ಎಂದು ಎಂಇಎಸ್ ನಾಯಕರು ಆರೋಪಿಸಿದ್ದಾರೆ.
ರಾಜ್ಯದ ಎರಡನೇ ರಾಜಧಾನಿಯಾಗಿರುವ ಬೆಳಗಾವಿ ಜಿಲ್ಲೆ ಮತ್ತು ರಾಜ್ಯದ ಒಟ್ಟು 814 ಹಳ್ಳಿಗಳಲ್ಲಿ ಮರಾಠಿ ಭಾಷಿಕರ ಪ್ರಾಬಲ್ಯವಿದ್ದು, ಈ ಪ್ರದೇಶಗಳನ್ನು ಮಹಾರಾಷ್ಟ್ರಗೆ ಸೇರಿಸಬೇಕೆಂದು ಮಹಾರಾಷ್ಟ್ರ ಒತ್ತಾಯಿಸುತ್ತಿದೆ.
ಗಡಿ ವಿವಾದ ಇತ್ಯರ್ಥ್ಯಕ್ಕಾಗಿ ಕೇಂದ್ರ ಸರ್ಕಾರ ನೇಮಿಸಿದ ಮಹಾಜನ್ ವರದಿಯು ಈ ಪ್ರದೇಶಗಳು ಕರ್ನಾಟಕದಲ್ಲಿಯೇ ಉಳಿಯಬೇಕು ಎಂಬ ವರದಿ ಸಲ್ಲಿಸಿವೆ. ಆದರೂ ಪಟ್ಟು ಬಿಡದ ಮಹಾರಾಷ್ಟ್ರ ಸರ್ಕಾರ ಕಳೆದ 12 ವರ್ಷಗಳಿಂದ ಸುಪ್ರೀಂ ಕೋರ್ಟ್ ನಲ್ಲಿ ಹೋರಾಡುತ್ತಿದೆ.