ಮಹಾರಾಷ್ಟ್ರ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಸಾಲದ ಮೊರೆ: ಶರದ್ ಪವಾರ್
ಮುಂಬೈ, ಅಕ್ಟೋಬರ್ 19: ಮಹಾರಾಷ್ಟ್ರ ನೆರೆ ಸಂತ್ರಸ್ತರಿಗೆ ನೆರವಾಗಲು ಸರ್ಕಾರವು ಸಾಲದ ಮೊರೆ ಹೋಗಬೇಕಾಗಬಹುದು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಂಕಣ, ಔರಂಗಾಬಾದ್, ಪುಣೆ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, 48ಕ್ಕೂ ಹೆಚ್ಚು ಮಂದಿ ಪ್ರಾಣಕಳೆದುಕೊಂಡಿದ್ದಾರೆ.
ಶರದ್ ಪವಾರ್ ಅವರು ಮರಾಠವಾಡದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಸರ್ಕಾರ ಒಂಟಿಯಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ.

ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಸಾಲ ಪಡೆಯಲೇಬೇಕು ಅದನ್ನು ಬಿಟ್ಟು ಸರ್ಕಾರಕ್ಕೆ ಇನ್ಯಾವುದೇ ದಾರಿ ಇಲ್ಲ. ಈಗಾಗಲೇ ಮಹಾರಾಷ್ಟ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಈ ಕುರಿತು ಸರ್ಕಾರದೊಂದಿಗೆ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ನಾಂದೇಡ್, ಪಂಡರಾಪುರ, ಉಸ್ಮಾನಾಬಾದ್, ಲಾತೂರ್ ಹೆಚ್ಚು ಹಾನಿಹೊಳ್ಳಲಾಗಿದೆ.ಸೊಯಾಬೀನ್, ಕಬ್ಬು ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. ಶುಕ್ರವಾರದವರೆಗೆ 40,036 ಮಂದಿಯನ್ನು ನಾಲ್ಕು ಜಿಲ್ಲೆಗಳ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೋಲಾಪುರದಿಂದ 32,500 ಮಂದಿ ಪುಣೆಯಿಂದ 6 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications