ಸೋನಿಯಾ ಭೇಟಿಗೂ ಮುನ್ನ ಶರದ್ ಪವಾರ್ ಅಚ್ಚರಿಯ ಹೇಳಿಕೆ
ನವದೆಹಲಿ, ನವೆಂಬರ್ 18: ಮಹಾರಾಷ್ಟ್ರದಲ್ಲಿ ಮಹಾಮೈತ್ರಿ ಸರ್ಕಾರ ರಚನೆಯಾಗುವ ಹೊಸ್ತಿಲಲ್ಲೇ ಅಪಸ್ವರ ಕೇಳಿಬಂದಿದೆ.
ಬಿಜೆಪಿ -ಶಿವಸೇನಾ ಚುನಾವಣೆಯಲ್ಲಿ ಜತೆಯಾಗಿ ಸ್ಪರ್ಧಿಸಿವೆ. ನ್ಯಾಷನಲಿಸ್ಟ್ -ಕಾಂಗ್ರೆಸ್ ಜತೆಯಾಗಿ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರ ದಾರಿ ಅವರು ನೋಡಿಕೊಳ್ಳಲಿ. ನಮ್ಮ ರಾಜಕೀಯ ನಾವು ಮಾಡುತ್ತೇವೆ ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಇದೀಗ ಸರ್ಕಾರ ರಚನೆಯಾಗುವುದೇ ಅನುಮಾನವಾಗಿದೆ.ಮಹಾರಾಷ್ಟ್ರದಲ್ಲಿ ಶಿವಸೇನಾ , ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರಿ ಇನ್ನೇನು ರಚನೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಲಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲಿದ್ದೇನೆ ಎಂದೂ ಪವಾರ್ ತಿಳಿಸಿದ್ದಾರೆ.
ಅಧಿಕಾರ ಹಂಚಿಕೆ ವಿಚಾರದಲ್ಲಿ ಬಿಜೆಪಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಶಿವಸೇನೆಯು ಕಳೆದ ವಾರ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿತ್ತು. ಬಳಿಕ ಎನ್ಸಿಪಿ , ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಮುಂದಾಗಿತ್ತು. ಸರ್ಕಾರ ರಚನೆ ಹಕ್ಕುಮಂಡಿಸಲು ಹೆಚ್ಚಿನ ಸಮಯಾವಕಾಶ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು.
ಹೀಗಾಗಿಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿದೆ. ಆದರೂ ಸರ್ಕಾರ ರಚನೆ ಪ್ರಯತ್ನ ಕೈಬಿಡದ ಶಿವಸೇನೆ ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿತ್ತು.
ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಮುಂದಿನ ನಡೆಗಳ ಬಗ್ಗೆ ಚರ್ಚಿಸಲು ಸೋನಿಯಾ-ಪವಾರ್ ಭೇಟಿ ನಿಗದಿಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.












Click it and Unblock the Notifications