ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ?
ಮುಂಬೈ, ಜುಲೈ.20: ದೇಶದಲ್ಲಿ ಮಂದಿರಗಳನ್ನು ನಿರ್ಮಿಸಿದರೆ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗನ್ನು ಹೋಗಲಾಡಿಸಲು ಸಾಧ್ಯ ಎಂದು ಕೆಲವರು ಭಾವಿಸಿದಂತೆ ಕಾಣುತ್ತಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.
ಸೋಲಾಪುರ್ ನಲ್ಲಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಕಾರ್ಯದ ಶಿಲಾನ್ಯಾಸದ ಕುರಿತು ಪ್ರಶ್ನಿಸಿದ ಸಂದರ್ಭದಲ್ಲಿ ಈ ರೀತಿ ಉತ್ತರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿರಬೇಕು. ಆದರೆ ಕೆಲವು ನಾಯಕರು ಮಂದಿರವನ್ನು ನಿರ್ಮಿಸುವುದರಿಂದ ಕೊವಿಡ್-19 ಉಪಶಮನವಾಗುತ್ತದೆ ಎಂದು ತಿಳಿದುಕೊಂಡಂತೆ ತೋರುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ಆಗಸ್ಟ್ ಮೊದಲ ವಾರದಲ್ಲೇ ದೇಗುಲ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಧಾನಮಂತ್ರಿಗೆ ಎರಡು ದಿನಾಂಕ ರವಾನೆ:
ಕಳೆದ ಶನಿವಾರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರು ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮಯವನ್ನು ನೋಡಿಕೊಂಡು ಆಗಸ್ಟ್.03 ಅಥವಾ ಆಗಸ್ಟ್.05ರಂದು ರಾಮಮಂದಿರ ನಿರ್ಮಾಣ ಕಾರ್ಯ ಶಿಲಾನ್ಯಾಸಗೊಳಿಸಲು ತೀರ್ಮಾನಿಸಲಾಗಿದೆ.
ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಾರಂಭಕ್ಕೆ ಶಿಲಾನ್ಯಾಸಗೊಳಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಬೇಕು ಎಂದು ಎರಡು ದಿನಾಂಕವನ್ನು ಕಳುಹಿಸಿದ್ದೇವೆ. ಪ್ರಧಾನಿಯವರ ಸಮಯವನ್ನು ನೋಡಿಕೊಂಡು ಮುಂದಿನ ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದು ರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಕಾಮೇಶ್ವರ ಚೌಪಾಲ್ ತಿಳಿಸಿದ್ದಾರೆ.












Click it and Unblock the Notifications