ಸುಶಾಂತ್ ಸಿಂಗ್ ಪ್ರಕರಣ: ತನಿಖೆ ಮುಕ್ತಾಯಕ್ಕೆ ಸಿಬಿಐ ತೀರ್ಮಾನ
ಮುಂಬೈ, ಅಕ್ಟೋಬರ್ 15: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐನ ವಿಶೇಷ ತನಿಖಾ ತಂಡ (ಎಸ್ಐಟಿ) ತನ್ನ ತನಿಖೆಯನ್ನು ಮುಕ್ತಾಯಗೊಳಿಸುವ ಹಂತದಲ್ಲಿದೆ. ಸುಶಾಂತ್ ಸಾವಿನಲ್ಲಿ ಯಾವುದೇ ಕೈವಾಡ ಇರುವ ಅನುಮಾನಕ್ಕೆ ಪುರಾವೆ ಸಿಕ್ಕಿಲ್ಲ ಎಂದು ಸಿಬಿಐ ತಂಡ ಹೇಳಿದೆ ಎನ್ನಲಾಗಿದೆ.
ಸಿಬಿಐ ತಂಡವು ತನಿಖೆಯಲ್ಲಿ ಸಿಕ್ಕಿದ ಮಾಹಿತಿಗಳನ್ನು ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ಸಲ್ಲಿಸಲಿದೆ. ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳ ಕುರಿತು ಮುಂದಿನ ಕ್ರಮ ತೆಗೆದುಕೊಳ್ಳುವುದನ್ನು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆ ಇದೆ.
ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಏಮ್ಸ್ ಸಮಿತಿ ವರದಿ ನೀಡಿದ ಬೆನ್ನಲ್ಲೇ, ಸಿಬಿಐ ತನ್ನ ತನಿಖೆಯನ್ನು ಮುಕ್ತಾಯಗೊಳಿಸಿ ವರದಿ ಸಲ್ಲಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ಇದು ಆತ್ಮಹತ್ಯೆ ಎಂದು ಘೋಷಿಸಿದ್ದರು. ಮುಂಬೈ ಪೊಲೀಸರ ತನಿಖೆ ಪ್ರಗತಿಯಲ್ಲಿರುವಾಗಲೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಬಳಿಕ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆಗಳು ಕೂಡ ಅಕ್ರಮ ಹಣ ವರ್ಗಾವಣೆ ಹಾಗೂ ಮಾದಕವಸ್ತು ಸಾಗಣೆಯ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದವು.












Click it and Unblock the Notifications