ಬ್ರೇಕಿಂಗ್ : ಗೂಡ್ಸ್ ರೈಲು ಡಿಕ್ಕಿ; 14 ವಲಸೆ ಕಾರ್ಮಿಕರು ಸಾವು
ಮುಂಬೈ, ಮೇ 08 : ಗೂಡ್ಸ್ ರೈಲು ಡಿಕ್ಕಿ ಹೊಡೆದು 14 ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಪಘಾತದಲ್ಲಿ 5 ಜನರಿಗೆ ಗಾಯವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಶುಕ್ರವಾರ ಮುಂಜಾನೆ 5.15ರ ಸುಮಾರಿಗೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 14 ವಲಸೆ ಕಾರ್ಮಿಕರು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರನ್ನು ಔರಂಗಾಬಾದ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು, ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿದೆ. ಘಟನೆಗೆ ನಿಖರವಾದ ಕಾರಣ ಏನು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮೃತಪಟ್ಟ ಕಾರ್ಮಿಕರು ಮಧ್ಯಪ್ರದೇಶ ರಾಜ್ಯದವರು ಎಂಬ ಮಾಹಿತಿ ಸಿಕ್ಕಿದೆ.
ರೈಲ್ವೆ ಹಳಿಯ ಮೇಲೆ ನಡೆದು ಹೋಗುತ್ತಿದ್ದ ಕಾರ್ಮಿಕರಿಗೆ ಖಾಲಿಯಾಗಿ ಹೋಗುತ್ತಿದ್ದ ಗೂಡ್ಸ್ ರೈಲು ಡಿಕ್ಕಿಯಾಗಿದೆ. ಆರ್ಪಿಎಫ್ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
"ಮಧ್ಯಪ್ರದೇಶಕ್ಕೆ ಹೊರಟಿದ್ದ ವಲಸೆ ಕಾರ್ಮಿಕರು ರೈಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಶುಕ್ರವಾರ ಮುಂಜಾನೆ 5.15ರ ಸುಮಾರಿಗೆ ಈ ಘಟನೆ ನಡೆದಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.












Click it and Unblock the Notifications