ಮಹಾರಾಷ್ಟ್ರದಲ್ಲಿ ಎರಡು ದಿನ ಯಡಿಯೂರಪ್ಪ ಮತ ಬೇಟೆ
ಬೆಂಗಳೂರು, ಅಕ್ಟೋಬರ್ 15 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಎರಡು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 288 ಸದಸ್ಯ ಬಲದ ವಿಧಾನಸಭೆಗೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ.
ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಯಡಿಯೂರಪ್ಪ ಪಕ್ಕದ ರಾಜ್ಯದಲ್ಲಿ ಮತ ಬೇಟೆಯಾಡಲಿದ್ದಾರೆ. ಅಕ್ಟೋಬರ್ 15 ಮತ್ತು 16ರಂದು ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ ಪ್ರಚಾರ ನಡೆಸಲಿದ್ದು, ಪಕ್ಷದ ಪರವಾಗಿ ಮತ ಯಾಚನೆ ಮಾಡಲಿದ್ದಾರೆ.

ಈಗಾಗಲೇ ಕರ್ನಾಟಕದ ಉಪ ಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ್ ಮತ್ತು ಲಕ್ಷ್ಮಣ್ ಸವದಿ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ. ಯಡಿಯೂರಪ್ಪ ಇಂದು ಮತ್ತು ನಾಳೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಮಹಾರಾಷ್ಟ್ರದ 13 ಜಿಲ್ಲೆಗಳಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಹೆಚ್ಚಿದೆ. ರಾಜ್ಯದಲ್ಲಿ ಸುಮಾರು 1.20 ಕೋಟಿ ಲಿಂಗಾಯತ ಸಮುದಾಯದ ಮತದಾರರು ಇದ್ದಾರೆ. ಆದ್ದರಿಂದ, ಯಡಿಯೂರಪ್ಪ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದಾಗ ಮುಂಬೈನ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಆಗ ಮಹಾರಾಷ್ಟ್ರದ ಬಿಜೆಪಿ ನಾಯಕರು ಅವರಿಗೆ ಭದ್ರತೆ ನೀಡಿದ್ದರು ಎಂಬ ಆರೋಪವೂ ಇದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾದ ಕೆಲವೇ ದಿನಗಳಲ್ಲಿ ಮಹಾದಾಯಿ ನದಿ ವಿವಾದದ ಕುರಿತು ಚರ್ಚೆ ನಡೆಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿಯಾಗಿದ್ದರು. ಈಗ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕದ ವಿರೋಧ ಪಕ್ಷಗಳು ವಿಧಾನಸಭೆ ಅಧಿವೇಶನ ವಿಸ್ತರಣೆ ಮಾಡುವಂತೆ ಪಟ್ಟು ಹಿಡಿದಿದ್ದವು. ಆದರೆ, ಚುನಾವಣಾ ಪ್ರಚಾರ, ಪ್ರವಾಹ ಕಾರ್ಯದ ನೆಪ ಹೇಳಿದ್ದ ಸರ್ಕಾರ ಅಧಿವೇಶನ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿರಲಿಲ್ಲ.
ಮಹಾರಾಷ್ಟ್ರದ 288 ಸದಸ್ಯ ಬಲದ ವಿಧಾನಸಭೆಗೆ ಅಕ್ಟೋಬರ್ 21ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಹ ಮಹಾರಾಷ್ಟ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.












Click it and Unblock the Notifications