ನೀತಿ ಸಂಹಿತೆ ಉಲ್ಲಂಘಿಸಿದ ಮೈಸೂರು ಜಿ.ಪಂ ಅಧ್ಯಕ್ಷೆ
ಮೈಸೂರು, ಜನವರಿ 22 : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.20ರಂದು ಮೈಸೂರು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ.
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಮತ್ತು ಸವಲತ್ತುಗಳನ್ನು ವಿತರಣೆ ಮಾಡಿದ್ದಾರೆ ಎಂದು ಪುಷ್ಪಾ ಅಮರನಾಥ್ ಅವರ ವಿರುದ್ಧ ಹುಣಸೂರು ಹಾಗೂ ಬಿಳಿಕೆರೆ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. [ಜಿಲ್ಲಾ ಪಂಚಾಯಿತಿ ಚುನಾವಣೆ ವೇಳಾಪಟ್ಟಿ]
ಜನವರಿ 18ರಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದರೆ, ಪುಷ್ಪಾ ಅಮರನಾಥ್ ಅವರು, ಸರ್ಕಾರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ['ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ನಮ್ಮದು']
ಮತ್ತೊಂದೆಡೆ ಧರ್ಮಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರವಾದ ಬಸವನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ಸವಲತ್ತುಗಳನ್ನು ವಿತರಣೆ ಮಾಡಿದ್ದಾರೆ ಎಂಬ ಆರೋಪವಿದೆ. ತಹಸೀಲ್ದಾರ್ ವೆಂಕಟಚಾಲಪ್ಪ ಅವರು ನೀಡಿದ ದೂರಿನ ಅನ್ವಯ ಬಿಳಿಕೆರೆ ಮತ್ತು ಹುಣಸೂರು ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. [ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆಗೆ ಹೋದರೆ ಗೆಲುವು]
ಫೆ.20ರಂದು ಚುನಾವಣೆ : ಚುನಾವಣಾ ಆಯೋಗ ಜಿಲ್ಲಾ ಪಂಚಾಯತಿ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯದ 26 ಜಿಲ್ಲಾ ಪಂಚಾಯಿತಿಗಳ ಒಟ್ಟು 922 ಕ್ಷೇತ್ರಗಳಿಗೆ ಫೆಬ್ರವರಿ 13 ಮತ್ತು 20ರಂದು ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಕೊಪ್ಪಳ ಜಿಲ್ಲಾ ಪಂಚಾಯಿತಿಗಳಿಗೆ ಫೆಬ್ರವರಿ 20ರಂದು ಚುನಾವಣೆ ನಡೆಯಲಿದೆ.