ಮೈಸೂರಿನಲ್ಲಿ ಭರದಿಂದ ಸಾಗಿದೆ ಇಂದಿರಾ ಕ್ಯಾಂಟಿನ್ ಕಾಮಗಾರಿ
ಮೈಸೂರು, ಡಿಸೆಂಬರ್ 6- ನಗರದ ಕಾಡಾ ಕಚೇರಿ ಆವರಣದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ 'ಇಂದಿರಾ ಕ್ಯಾಂಟೀನ್' ಕಾಮಗಾರಿ ಭರದಿಂದ ಸಾಗಿದೆ.
ಇನ್ನು ಕಾಮಗಾರಿ ಕುರಿತು ಮಾತನಾಡಿದ ಶಾಸಕ .ಕೆ. ಸೋಮಶೇಖರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಕೂಡ ಒಂದು. ಬಡವರು, ಕೂಲಿಕಾರ್ಮಿಕರು ಹೀಗೆ ಎಲ್ಲರಿಗೂ ಕಡಿಮೆ ದರದಲ್ಲಿ ರುಚಿಕರವಾದ ಉಪಹಾರ ದೊರೆಯಬೇಕೆಂಬ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದೆ.
ಬೆಂಗಳೂರಿನಲ್ಲಿ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿದೆ. ಈ ಯೋಜನೆಯನ್ನು ರಾಜ್ಯದೆಲ್ಲೆಡೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಅದರಂತೆ ಮೈಸೂರಿನಲ್ಲೂ ಇಂದಿರಾ ಕ್ಯಾಂಟೀನ್ ಅನ್ನು ಜನವರಿಯಿಂದ ಪ್ರಾರಂಭಿಸಲಾಗುತ್ತಿದೆ ಎಂದರು.
ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೊಟ್ಟ ಮೊದಲ ಬಾರಿಗೆ ಕಾಡಾ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನ ಕೆಲಸ ನಡೆಯುತ್ತಿದೆ. ಎರಡು ದಿನಗಳಲ್ಲಿ ಕ್ಯಾಂಟೀನ್ ಕಟ್ಟಡದ ಕೆಲಸ ಪೂರ್ಣಗೊಂಡಿದ್ದು, ಉಳಿದ ಕೆಲಸಗಳು ಆದಷ್ಟು ಬೇಗ ಮುಗಿಯಲಿದೆ. ಜನವರಿ 1 ರಿಂದ ಮೈಸೂರು ಜನತೆಗೆ ಇಂದಿರಾ ಕ್ಯಾಂಟೀನ್ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.