ಉಪವಾಸ ಕೈಬಿಡಲು ಒಲ್ಲದ ಶ್ರೀರಾಮ ಸಕ್ಕರೆ ಕಾರ್ಖಾನೆ ಸತ್ಯಾಗ್ರಹಿಗಳು
ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಪುನರಾಂಭಿಸಲು ಒತ್ತಾಯಿಸಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ
ಮೈಸೂರು, ಜನವರಿ 24: ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕೆ ಆಗ್ರಹಿಸಿ ನಡೆಸಲಾಗುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಮಾಡಿದ್ದ ಮನವಿಯನ್ನು ಸತ್ಯಾಗ್ರಹಿಗಳು ತಿರಸ್ಕರಿಸಿದ್ದಾರೆ.
ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕೆ ಅಗ್ರಹಿಸಿ ಕೆ.ಆರ್. ನಗರದ ಮಿನಿ ವಿಧಾನಸೌಧದ ಮುಂಭಾಗ ಕಳೆದ ಆರು ದಿನಗಳಿಂದ ಈ ಸತ್ಯಾಗ್ರಹ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಜನವರಿ ೨೬ ರ ನಂತರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಸತ್ಯಾಗ್ರಹಿಗಳ ದೂರನ್ನು ಆಲಿಸಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಜಿಲ್ಲಾಧಿಕಾರಿ ವೆಂಕಟೇಶ್ ಅವರು ಮಂಗಳವಾರ, ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡಿದರು.
ಆದರೆ, ಹೆಚ್ಚುವರಿ ಜಿಲ್ಲಾಧಿಕಾರಿಯವರ ಮನವಿ ತಿರಸ್ಕರಿಸಿದ ಸತ್ಯಾಗ್ರಹಿಗಳು, ಸಮಸ್ಯೆ ಇತ್ಯರ್ಥಗೊಳಿಸುವ ಬಗ್ಗೆ ಉಸ್ತುವಾರಿ ಸಚಿವರೇ ಭರವಸೆ ನೀಡಿ, ಸಭೆ ನಡೆಸುವ ದಿನಾಂಕವನ್ನು ನಿಖರವಾಗಿ ಘೋಷಿಸುವವರೆಗೂ ಸತ್ಯಾಗ್ರಹ ಕೈಬಿಡುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟ ಪಡಿಸಿದರು.
ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಕ್ರಮಕೈಗೊಳ್ಳುವಂತೆ ಕಳೆದ ನಾಲ್ಕು ವರ್ಷಗಳಿಂದ ನಡೆಸಲಾಗಿರುವ ಸಭೆಗಳು ಯಾವುದೇ ಫಲ ನೀಡಿಲ್ಲ. ಈ ಬಗ್ಗೆ ಇನ್ನಾದರೂ ಗಂಭೀರ ಪ್ರಯತ್ನವನ್ನು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಮುಷ್ಕರ ನಿರತರು ಆಗ್ರಹಿಸಿದರು.